ಪರೀಕ ಆಸ್ಪತ್ರೆ ‘ಸೌಖ್ಯವನ’ದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
ಉಡುಪಿ: ಪರ್ಕಳ ಸಮೀಪ ಪರೀಕ್ಷದಲ್ಲಿರುವ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ದಲ್ಲಿ ಇಂದು ಸಂಜೆ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕ್ಷೇಮ ಹಾಲ್ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಉದ್ಯಾವರ ಆಯುರ್ವೇದ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಆಗಿರುವ ಡಾ. ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ವೈದ್ಯರ ಕರ್ತವ್ಯದ ಬಗ್ಗೆ ವಿವರಿಸಿದರು.ಅಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ಧನ್ವಂತರಿ ಮತ್ತು ಪತಂಜಲಿ ತತ್ವದ ಅನುಸರಣೆಯಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.
ರೋಗಿಗಳಿಗೆ ಕಾಯಿಲೆಗೆ ತಕ್ಕ ಪ್ರಾಮಾಣಿಕ ಚಿಕಿತ್ಸೆಯನ್ನು ನೀಡಿದಲ್ಲಿ ರೋಗಿಯೂ ಗುಣಮುಖರಾಗುವುದಲ್ಲದೆ, ಆಸ್ಪತ್ರೆ ಯಲ್ಲಿರುವ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗಲೇ ವೈದ್ಯ ವೃತ್ತಿಗೂ ಒಳ್ಳೆಯ ಹೆಸರು ಮತ್ತು ಜನರಲ್ಲಿ ವಿಶ್ವಾಸ ಮೂಡಲು ಸಾಧ್ಯ ಎಂದರು.
ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ ಉಪಸ್ಥಿತರಿದ್ದು ಶುಭಹಾರೈಸಿದರು. ಸಂಸ್ಥೆಯ ವತಿಯಿಂದ ಡಾ.ನಾಗರಾಜ್ ಅವರನ್ನು ಗೌರವಿಸಲಾಯಿತು. ಆಸ್ಪತ್ರೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿ ವಂದಿಸಿದರು.