ನೆರೆ ಹಾವಳಿ, ಸಂತ್ರಸ್ತರ ಗೋಳು ಪರಿಹರಿಸದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ನಾಪತ್ತೆ: ಮಹಿಳಾ ಮೋರ್ಚಾ ಟೀಕೆ

Update: 2024-07-10 16:08 GMT

ಉಡುಪಿ, ಜು.10: ಉಡುಪಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ನೆರೆ ಹಾವಳಿ, ಕಡಲ್ಕೊರೆತ, ಆಸ್ತಿ-ಪಾಸ್ತಿ ನಷ್ಟ, ಬೆಳೆ ಹಾನಿ ಸಹಿತ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸ ಬೇಕಾದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯಲ್ಲಿ ಎಲ್ಲಿಯೂ ಕಾಣಲು ಸಿಗದೇ ನಾಪತ್ತೆ ಯಾಗಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆ ಯನ್ನು ತಾವು ಉದ್ದೇಶಪೂರ್ವಕವಾಗಿ ಕಡೆಗಣಿಸು ತ್ತಿದ್ದೀರಾ ಎಂಬುದನ್ನು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಕೂಡಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸರಕಾರದ ಆದಾಯ ಹೆಚ್ಚಿಸಲು ಉಡುಪಿಯನ್ನು ಪ್ರವಾ ಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂಬ ಸೂಚನೆ ನೀಡುತ್ತಿದ್ದಾರೆ ವಿನಃ ನೆರೆ ಹಾವಳಿಯಿಂದ ಜಿಲ್ಲೆಯ ಅನೇಕ ಮುಖ್ಯ ರಸ್ತೆಗಳು ಹೊಳೆಯಂತೆ ಮಾರ್ಪಾಡಾಗಿ ಕೃತಕ ಈಜು ಕೊಳ ನಿರ್ಮಾಣವಾಗಿರುವ ಕುರಿತು ದಿವ್ಯ ಮೌನ ವಹಿಸಿರುವುದು ಶೋಚನೀಯ ಎಂದು ಸಂಧ್ಯಾ ರಮೇಶ್ ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯನ್ನು ನಿರ್ಲಕ್ಷಿಸುತ್ತಿ ರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಸುದೀರ್ಘ ಅವಧಿಗೆ ಜಿಲ್ಲೆಗೆ ಆಗಮಿಸದೇ ಇದ್ದ ಕಾರಣಕ್ಕೆ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದರು. ಉಸ್ತುವಾರಿ ಸಚಿವರು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ನೆರೆ ಹಾವಳಿ, ಆಸ್ತಿ-ಪಾಸ್ತಿ ನಷ್ಟ, ಬೆಳೆ ಹಾನಿ ಕುರಿತು ತುರ್ತು ಸಭೆ ನಡೆಸಿ, ಅಗತ್ಯ ಪರಿಹಾರ ಮಾರ್ಗೋಪಾಯಗಳ ಮೂಲಕ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಂಧ್ಯಾ ರಮೇಶ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News