ವಿಶ್ವಕರ್ಮ ಸಮಾಜದ ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-09-17 14:10 GMT

ಉಡುಪಿ, ಸೆ.17: ವಿಶ್ವಕರ್ಮ ಸಮಾಜ ಇತ್ತೀಚಿನ ದಿನಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇವುಗಳನ್ನು ದಿಟ್ಟ ವಾಗಿ ಎದುರಿಸಿ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ಮುಖ್ಯವಾಗಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ನಗರದ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ವಿಶ್ವಕರ್ಮ ಸಮುದಾಯ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅಜಂತಾ, ಎಲ್ಲೋರ, ಐಹೊಳೆ, ಹಂಪಿ, ಬೇಲೂರು-ಹಳೆಬೀಡು, ಜಕಣಾಚಾರ್ಯರು ಶ್ರವಣಬೆಳಗೊಳದಲ್ಲಿ ನಿರ್ಮಿಸಿದ ಬಾಹುಬಲಿ ಮೂರ್ತಿಯು ವಿಶ್ವಕರ್ಮರ ಕೈಚಳಕಕ್ಕೆ ಉದಾಹರಣೆಯಾಗಿದೆ ಎಂದವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮ ಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದರು.

ಪಂಚಮುಖಿ ವಿಶ್ವಕರ್ಮರನ್ನು ಸಮಾಜ ನಾನಾ ರೀತಿಯಲ್ಲಿ ನೆನೆಪಿನಲ್ಲಿಟ್ಟು ಕೊಳ್ಳುತ್ತದೆ. ಮರಗೆಲಸ, ಕಬ್ಬಿಣದ ಕೆಲಸ, ಚಿನ್ನ-ಬೆಳ್ಳಿ ತಯಾರಕರು, ಶಿಲ್ಪಕಲೆ, ಕಂಚು-ಹಿತ್ತಾಳೆ ಕುಸುರಿ ಕೆಲಸ ನಿರ್ವಹಿಸುವವರಿಗೆ ಮೂಲ ಪುರುಷ ವಿಶ್ವಕರ್ಮರು. ಇವರ ಉಲ್ಲೇಖ ನಮ್ಮ ಪುರಾಣಗಳಲಲಿ ವ್ಯಪಕವಾಗಿ ಬರುತ್ತದೆ ಎಂದರು.

ಇದೀಗ ಕೇಂದ್ರ ಸರಕಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ಕೋಟ್ಯಾಂತರ ಜನರ ಜೀವನಕ್ಕೆ ದಾರಿದೀಪವಾಗಿದೆ. ಈ ಬಗ್ಗೆ ಹೆಚ್ಚು ಪ್ರಚಾರ ಮೂಡಿಸಿ, ಸಮುದಾಯದ ಜನರನ್ನು ಹೆಚ್ಚೆಚ್ಚು ಯೋಜನೆಯ ಫಲಾನುಭವಿಗಳನ್ನಾಗಿಸಬೇಕು ಎಂದರು.

ಮಣಿಪಾಲ ಮಾಹೆಯ ಡಾ.ಪ್ರತಿಮಾ ಜಯಪ್ರಕಾಶ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮರು ಕುಲಕ ಸುಬಿನ ಮೂಲಕ ಸಮಾಜಕ್ಕೆ ಬೆಳಕಾದವರು. ವಿಶ್ವಕರ್ಮ ಎಂಬುವುದು ವ್ಯಕ್ತಿಯಲ್ಲ. ಒಂದು ಅದ್ವಿತೀಯ ಶಕ್ತಿ ಎಂದು ಸಮುದಾಯದವರು ನಂಬಿದ್ದಾರೆ. ವಿಶ್ವಕರ್ಮ ಸಮುದಾಯ ಅಭಿವೃದ್ಧಿಗೆ ಸರಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಅವುಗಳ ಸದುಪಯೋಗವನ್ನು ಸಮುದಾಯ ಪಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಸಾಧನೆಗೈದ ವಿಶ್ವಕರ್ಮ ಸಮಾಜದ ಐವರು ಹಿರಿಯರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವೆಂಕಟೇಶ್ ಆಚಾರ್ಯ, ವಿಶ್ವಕರ್ಮ ಒಕ್ಕೂಟ ಮತ್ತು ರಾಷ್ಟ್ರೀಯ ಬ್ರಾಹ್ಮಣ ಸಮಾಜ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಅನಂತಯ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ರತ್ನಾಕರ ಆಚಾರ್ಯ ವಂದಿಸಿದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News