ಸರಕಾರಿ ಸೌಲಭ್ಯಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಲು ಉಡುಪಿ ಡಿಸಿ ಕರೆ

Update: 2024-09-20 15:32 GMT

ಉಡುಪಿ, ಸೆ.20: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದೆ. ಅವರಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರನ್ನು ಇದರ ಫಲಾನುಭವಿ ಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದ ರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದವರು ಕರೆ ನೀಡಿದರು.

ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪುನರ್ವ ಸತಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಮುದಾಯ ಆಧಾರಿತ ಸಂಸ್ಥೆ ಯಲ್ಲಿ ನೋಂದಣಿ ಆಗಿರುವವರು ಈ ಯೋಜನೆಯ ಲಾಭ ಪಡೆಯಬಹುದು. ಪ್ರಸ್ತುತ ಸಾಲಿನಲ್ಲಿ 15 ಜನರಿಗೆ ಅರ್ಜಿ ಸಲ್ಲಿ ಸಲು ಅವಕಾಶವಿದೆ. ಆದರೆ ಈವರೆಗೆ ಒಬ್ಬರೇ ಅರ್ಜಿ ಸಲ್ಲಿಸಿದ್ದು, ಈ ಯೋಜನೆ ಯಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವುದ ರೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದರು.

ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ಜಾರಿಗೊಳಿಸ ಲಾಗಿದೆ. ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಪಡೆದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ನೋಂದಾಯಿಸಿ ಇದರ ಲಾಭ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೆ 32 ಜನ ಲಿಂಗತ್ವ ಅಲ್ಪ ಸಂಖ್ಯಾತರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು.

ಸರಕಾರದ ಯಾವುದೇ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರದ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‌ಜೆಂಡರ್ ಪರ್ಸನ್ಸ್ ಪೋರ್ಟಲ್‌ನ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಗುರುತಿನ ಚೀಟಿ ನೀಡಲಾಗುವುದು ಎಂದರು.

ಲಿಂಗತ್ವ ಅಲ್ಪಸಂಖ್ಯಾತರು ಸರಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯ ಗಳನ್ನು ಮಾಡಿಸಿಕೊಳ್ಳಲು ಬಂದಾಗ ಅವ ರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜೊತೆಗೆ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡ ಬೇಕು ಎಂದ ಅವರು, ಸಮಾಜವು ಅವರೊಂದಿಗೆ ತಾರತಮ್ಯ ಮಾಡದೆ ಮಾನವೀಯ ನೆಲೆಯಲ್ಲಿ ಸಹಕರಿಸಬೇಕು ಎಂದರು.

ನಿವೇಶನ ಲಭ್ಯವಿರುವಲ್ಲಿ ಅಲ್ಪಸಂಖ್ಯಾತರ ಗೃಹ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ ಅಗತ್ಯ ಆರ್ಥಿಕ ನೆರವು ಕಲ್ಪಿಸಲಾ ಗುವುದು ಎಂದ ಜಿಲ್ಲಾಧಿಕಾರಿ, ನಿವೇಶನ ರಹಿತರು ಇದ್ದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದಲ್ಲಿ ಲಭ್ಯತೆಯ ಆದ್ಯತೆಯ ಮೇಲೆ ನಿವೇಶನ ಮಂಜೂರು ಮಾಡಲಾಗುವುದು ಎಂದರು.

ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಇದಕ್ಕಾಗಿ ಸರಕಾರದ ವಿವಿಧ ಹುದ್ದೆಗಳಿಗೆ ಸ್ಪರ್ಧಾ ತ್ಮಕ ಪರೀಕ್ಷೆಗಳನ್ನು ಕರೆದಾಗ ಅವುಗಳಲ್ಲಿ ಭಾಗವಹಿಸಬೇಕು ಎಂದ ಅವರು, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಗಳನ್ನು ನಿಯಮಾನುಸಾರ ಸರಳವಾಗಿ ನೀಡುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗುವುದು ಎಂದರು.

ಬೇಡಿಕೆ: ಶಾಲಾ ಹಂತಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ತಾರತಮ್ಯ ಮಾಡುವುದು ಕಂಡುಬರುತ್ತಿದೆ. ಶಾಲಾ ಶಿಕ್ಷಕರು ವಿದ್ಯಾರ್ಥಿ ಹಂತದಲ್ಲಿಯೇ ಈ ಬಗ್ಗೆ ಅರಿವು ಮೂಡಿಸುವುದು ಸೂಕ್ತ. ಸರಕಾರಿ ಉದ್ಯೋಗಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮೀಸಲಿಡಬೇಕು. ಸಮಾಜದಲ್ಲಿ ನಮ್ಮನ್ನು ನೋಡುವ ರೀತಿಯಲ್ಲಿ ಬದಲಾವಣೆ ಆಗಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಸಭೆಯಲ್ಲಿ ಸಲ್ಲಿಸಿದರು.

ಸಭೆಯಲ್ಲಿ ಎಎಸ್ಪಿ ಟಿ.ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿ ಮನಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News