ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಲಕ್ಷ್ಮೀಪತಿ ಭಟ್
ಉಡುಪಿ: ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಅನುದಿನವೂ ವೃದ್ದಿಸಿಕೊಳ್ಳುವ ಅಗತ್ಯತೆ ಇದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ರೋಬೊಸಾಫ್ಟ್ ಟೆಕ್ನಾಲಜೀಸ್ ಗ್ಲೋಬಲ್ ಮಾರ್ಕೆಟಿಂಗ್ ಆ್ಯಂಡ್ ಕಮ್ಯುನಿಕೇಶನ್ಸ್ನ ಹಿರಿಯ ಉಪಾಧ್ಯಕ್ಷ ಲಕ್ಷ್ಮೀಪತಿ ಭಟ್ ಹೇಳಿದ್ದಾರೆ.
ಬಂಟಕಲ್ನ ಶ್ರೀಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರವಿವಾರ ನಡೆದ 11ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.
ಬೆಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕ ಡಾ.ಎಲ್ಎನ್ ಶೇಷಗಿರಿ ಮಾತ ನಾಡಿ ಒಬ್ಬ ವ್ಯಕ್ತಿಯು ಹುಟ್ಟಿನಿಂದ ಪದವಿಯವರೆಗಿನ ಕಲಿಕೆಯು, ಜೀವನದ ಉದ್ದೇಶವನ್ನು ತಿಳಿದು ಕೊಳ್ಳಲು ಮತ್ತು ಉದ್ದೇಶನ್ನು ಸಾಧಿಸಲು ಸಾಧ್ಯವಾಗುತ್ತದೆ. ಸಮಾಜದ ಮಾನವೀಯ ಮೌಲ್ಯಗಳ ಅಗತ್ಯತೆಯನ್ನು ಅರಿತು ಕಾರ್ಯ ನಿರ್ವಹಿಸ ಬೇಕೆಂದು ತಿಳಿಸಿದರು.
ಉಡುಪಿ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರತ್ನ ಕುಮಾರ್ ಮಾತನಾಡಿದರು. ಈ ಸಂದರ್ಭ ವಿಶ್ವ ವಿದ್ಯಾನಿಲಯದಿಂದ ಚಿನ್ನದ ಪದಕ ಪಡೆದ ರಕ್ಷಾ ಮತ್ತು ವಿಶ್ವ ವಿದ್ಯಾನಿಯದ ಬಿಇ ಹಾನರ್ಸ್ ಪಡೆದ ಶೇಖ್ ಮುಹಮ್ಮದ್ ಶುಹೂದ್ ಇವರನ್ನು ಸನ್ಮಾನಿಸಲಾಯಿತು.
ಮಂಗಳೂರಿನ ಪ್ರತಿಷ್ಠಿತ ಎಸ್.ಎಲ್.ಶೇಟ್ ಜ್ಯುವೆಲ್ಲರ್ಸ್ನಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಜಿ.ಅಕ್ಷತ, ಗಣಕ ಯಂತ್ರ ವಿಭಾಗದ ಶೇಖ್ ಮುಹಮ್ಮದ್ ಶುಹೂದ್, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ನಿಖಿತ ಶೆಟ್ಟಿ ಮತ್ತು ಮೆಕ್ಯಾನಿಕಲ್ ವಿಭಾಗದ ಅಂಕಿತ್ ಸುವರ್ಣ ಅವರಿಗೆ ಚಿನ್ನದ ಪದಕಗಳನ್ನು ನೀಡಲಾಯಿತು.
ಕಾಲೇಜಿನ ಸಂಶೋಧನಾ ಕೇಂದ್ರದಿಂದ ಡಾಕ್ಟರೇಟ್ ಪದವಿ ಪಡೆದವರನ್ನು ಸನ್ಮಾನಿಸಲಾಯಿತು. ಅಂತಿಮ ವರ್ಷದಲ್ಲಿ ಪ್ರತಿ ವಿಭಾಗದಲ್ಲಿ ಅಧಿಕ ಅಂಕ ಪಡೆದ ನಾಲ್ಕು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ, ಡೀನ್ಗಳಾದ ಡಾ.ಸುದರ್ಶನ್ ರಾವ್, ಡಾ.ನಾಗರಾಜ್ ಭಟ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಪ್ರಮಾಣವಚನ ಭೋದಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಎಚ್.ಜೆ. ವಂದಿಸಿದರು. ಪ್ರಾಧ್ಯಾಪಕಿ ಅಕ್ಷತಾ ರಾವ್ ಮತ್ತು ಅನಂತ್ ಮೋಹನ್ ಮಲ್ಯ ಕಾರ್ಯಕ್ರಮ ನಿರೂಪಿಸಿದರು.