ಹಿಂದಿನ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಪುನರ್ವಸತಿ ಕಲ್ಪಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-09-27 15:21 GMT

ಉಡುಪಿ, ಸೆ.27: ಈ ಹಿಂದೆ ಜಿಲ್ಲೆಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿಯನ್ನು ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಡಾ.ಕೆ.ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್‌ಗಳನ್ನು ನೇಮಿಸಿಕೊಂಡು ಶುಚಿತ್ವದ ಕೆಲಸ ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಗುರುತಿಸಲಾದ ಮಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ, ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿ ವೇತನ, ಉದ್ಯೋಗ, ಸಾಲ ಸೌಲಭ್ಯಗಳ ರೀತಿಯಲ್ಲೇ ಪುನರ್ವಸತಿ ಸಹ ಕಲ್ಪಿಸಬೇಕು ಎಂದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮಾನ್ಯು ಯಲ್ ಸ್ಕ್ಯಾವೆಂಜರ್ಸ್ ಮತ್ತು ಪೌರಕಾರ್ಮಿಕರ ಮಕ್ಕಳಿಗೆ ಶೇ.5ರಷ್ಟು ಪ್ರವೇಶ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.

ಪೌರ ಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿ ಸುವಾಗ ತಪ್ಪದೆ ಸುರಕ್ಷತಾ ಪರಿಕರಗಳನ್ನು ಧರಿಸಿ, ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಇದರ ಬಳಕೆ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಪೌರಾಡಳಿತದ ನಿರ್ದೇಶನದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಮಾಡಿಸಬೇಕು. ಅವರುಗಳಿಗೆ ವಿತರಿಸುವ ಉಪಹಾರವು ಪೌಷ್ಟಿಕತೆ ಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದರು.

ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳ ಜೀವನಮಟ್ಟವನ್ನು ಮತ್ತಷ್ಟ್ಟು ಉತ್ತಮ ಗೊಳಿಸುವ ನಿಟ್ಟಿನಲ್ಲಿ ಸ್ವಯಂಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಪೌರ ಕಾರ್ಮಿಕರು ಹಾಗೂ ಅವರುಗಳ ಅವಲಂಬಿತರು ಅರ್ಜಿ ಸಲ್ಲಿಸುವುದರೊಂದಿಗೆ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಡ್ರೈವರ್ಸ್‌, ಲೋಡರ್ಸ್‌ಗಳಿಗೆ ಪ್ರತೀ ತಿಂಗಳ ವೇತನವನ್ನು ಕಾಲಕಾಲಕ್ಕೆ ಪಾವತಿಸಬೇಕು ಎಂದ ಡಿಸಿ, ಮ್ಯಾನ್ಯುಯಲ್ ಸ್ಕಾವೆಂಜರ್ಸ್‌ ಹಾಗೂ ಪೌರ ಕಾರ್ಮಿಕರಿಗೆ ಆದ್ಯತೆಯ ಮೇಲೆ ಶೀಘ್ರವಾಗಿ ನಿವೇಶನ, ನಿವೇಶನ ಹೊಂದಿದವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಸಹಾಯಕ ಕಮಿಷನರ್ ಮಹೇಶ್ಚಂದ್ರ, ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ ಡಿ.ಟಿ. ಪ್ರಭು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ಮುಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

ಸಹಾಯವಾಣಿ

ಜಿಲ್ಲೆಯ ನಗರ ಅಥವಾ ಗ್ರಾಮೀಣ ಭಾಗದ ಯಾವುದೇ ಮನೆ, ಆಸ್ಪತ್ರೆ, ಅಪಾರ್ಟ್‌ಮೆಂಟ್, ಕಂಪನಿ ಸೇರಿದಂತೆ ಯಾವುದೇ ಕಡೆಯಲ್ಲಿ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿ ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಘನ ತ್ಯಾಜ್ಯ ವಿಲೇವಾರಿ ವಾಹನಗಳ ಬಳಕೆ ಮಾಡಿ ಕೊಳ್ಳಬೇಕು. ಇದಕ್ಕಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 14420 ಹಾಗೂ ಗ್ರಾಮೀಣ ಪ್ರದೇಶದಲ್ಲಿ 9480985555 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.




 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News