ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಡೆಲ್ಟಾಬೀಚ್ ಸ್ವಚ್ಛತೆ

Update: 2024-09-27 15:39 GMT

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಇಂದು ಕೋಡಿಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಕಡಲ ಕಿನಾರೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆರ್ಕಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.

ಹೊಸ ಬೀಚಿನ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ ಎಂದರು.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗಮಿಸಲಿ ರುವುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳು ವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಬಕಾರಿ ಕಮಿಷನರ್ ಬಿಂದುಶ್ರೀ, ಪಿ.ಡಿ.ಓ, ಪಿ.ಪಿ.ಸಿ ಸಂಧ್ಯಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಮಾಹೆಯ ಉಪನ್ಯಾಸಕರು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಕರಾವಳಿ ಪ್ರವಾಸೋದ್ಯಮ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕೋಟ ಪಂಚವರ್ಣ ಯುವಕ ಮಂಡಲದ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.





Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News