ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ: ವಿನ್ಸೆಂಟ್ ಕ್ರಾಸ್ತಾ

Update: 2024-10-13 12:13 GMT

ಉಡುಪಿ, ಅ.13: ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವತ್ತ ಕಾರ್ಯೋನ್ಮುಖ ರಾಗಬೇಕೆಂದು ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ ಅಭಿಪ್ರಾಯ ಪಟ್ಟಿದ್ದಾರೆ.

ಕಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ದಿ.ತೆರೆಜಾ ಕರ್ನೆಲಿಯೋ ಮತ್ತು ಕುಟುಂಬ ಇವರುಗಳ ಜಂಟಿ ಆಶ್ರಯದಲ್ಲಿ ರವಿವಾರ ಕಕ್ಕುಂಜೆಯ ಅನುಗ್ರಹ ಪಾಲನಾ ಕೇಂದ್ರದಲ್ಲಿ ಆಯೋಜಿಸಲಾದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಶಿಕ್ಷಣವು ಆಧುನಿಕ ಸಮಾಜದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜೀವನದ ಗುಣಮಟ್ಟವನ್ನು ಸುಧಾರಿಸಲು ಅಗತ್ಯವಾದ ಸಾಧನಗಳನ್ನು ಒದಗಿಸುತ್ತದೆ. ಶಿಕ್ಷಣವು ಪರಸ್ಪರ ಸಂಪರ್ಕ ಸಾಧನವಾಗಿದ್ದು ವ್ಯಕ್ತಿಯ ಹಾಗೂ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಎಂಬುದು ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ತಾವು ಅಭಿವೃದ್ಧಿ ಹೊಂದಿದ ಬಳಿಕ ಇತರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಹುದ್ದೆಗಳತ್ತ ಗಮನ ಹರಿಸುವಂತೆ ಸಲಹೆ ನೀಡಿದರು.

ಸಮಾಜ ಸೇವಕಿ ಹಾಗೂ ದಿ.ತೆರೆಸಾ ಕರ್ನೆಲಿಯೋ ಕುಟುಂಬ ಸದಸ್ಯೆ ವೆರೋನಿಕಾ ಕರ್ನೆಲಿಯೋ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮವಾದ ಹಾಗೂ ಇಂದಿನ ಅಗತ್ಯತೆಗೆ ಸಂಬಂಧಪಟ್ಟ ಶಿಕ್ಷಣ ಹೊಂದಿರದಿದ್ದರೆ ಉತ್ತಮ ಭವಿಷ್ಯ ಪಡೆಯುವುದು ಕಷ್ಟ ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಹೆಚ್ಚು ಗಮನ ಹರಿಸಬೇಕು ಎಂದರು.

ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಥೊಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕ ಮೊನ್ಸಿಂಜ್ಞೊರ್ ಫೆರ್ಡಿನಾಂಡ್ ಗೊನ್ಸಾಲ್ವಿಸ್ ಶುಭ ಹಾರೈಸಿದರು. ಒಟ್ಟು 50 ವಿದ್ಯಾರ್ಥಿಗಳಿಗೆ 5ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸ ಲಾಯಿತು. ಇದೇ ವೇಳೆ ಸಶಕ್ತ ಸಮುದಾಯ ಟ್ರಸ್ಟ್ ವತಿಯಿಂದ ಕ್ಯಾಪ್ ಸೆಲ್ ಕಲ್ಯಾಣಪುರ ನಿಧಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ಕೂಡ ವಿತರಿಸಲಾಯಿತು.

ಕಥೊಲಿಕ್ ಸಭಾ ನಿಯೋಜಿತ ಅಧ್ಯಕ್ಷ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಸಹಕಾರ್ಯದರ್ಶಿ ಲೂಯಿಸ್ ಡಿಸೋಜ, ಮಾಜಿ ಅಧ್ಯಕ್ಷ, ಆಲ್ಫೋನ್ಸ್ ಡಿಕೋಸ್ತಾ, ವಾಲ್ಟರ್ ಸಿರಿಲ್ ಪಿಂಟೊ, ಕುಂದಾಪುರ ವಲಯ ಅಧ್ಯಕ್ಷ ರೋಜಿ ಕ್ವಾಡ್ರಸ್, ಕುಂದಾಪುರ ವಲಯ ಅಧ್ಯಕ್ಷ ವಿಲ್ಸನ್ ಡಿ ಆಲ್ಮೇಡಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕ ಡಾ.ಜೆರಾಲ್ಡ್ ಪಿಂಟೊ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News