ದುಬೈನ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
ಬ್ರಹ್ಮಾವರ, ಅ.21: ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಆಡಳಿತ ನಿರ್ದೇಶಕ ರಾಗಿರುವ ದುಬೈನ ಪಾರ್ಚೂನ್ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಂಧಿಸಲ್ಪಟ್ಟಿದ್ದ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31) ಜಾಮೀನು ತಿರಸ್ಕರಿಸಿ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶಿಸಿದೆ.
ಆರೋಪಿಗೆ ಬ್ರಹ್ಮಾವರ ಜೆಎಂಎಫ್ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದು ಬಳಿಕ ಅ.16ರಂದು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿ ದ್ದರು. ಆರೋಪಿಯು ನೈಜ್ಯ ಮಾಹಿತಿಗಳನ್ನು ಮುಚ್ಚಿಟ್ಟು ನ್ಯಾಯಾಲಯದಲ್ಲಿ ಜಾಮೀನು ಪಡೆದಿರುವುದು, ತನಿಖೆಗೆ ಅಸಹಕಾರ, ತಲೆ ಮರೆಸಿಕೊಂಡಿ ರುವ ವಿಚಾರದ ಬಗ್ಗೆ ನ್ಯಾಯಾಲಯದಲ್ಲಿ ಸುಧೀರ್ಘವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.
ಬ್ರಹ್ಮಾವರ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಆರೋಪಿ ಮೊದಲು ಸಲ್ಲಿಸಿದ ಜಾಮೀನು ಅರ್ಜಿಯನ್ನು ಮರುವಿಮರ್ಷೆಗೆ ಒಳಡಿಸಲು ಹೈಕೋರ್ಟ್ ಸ್ಪಷ್ಟವಾಗಿ ಸೂಚಿಸಿದ್ದರೂ ಕೂಡ ಹೊಸ ಜಾಮೀನು ಅರ್ಜಿ ಸಲ್ಲಿಸಿದ ಬಗ್ಗೆಯೂ ಸರಕಾರಿ ಅಭಿಯೋಜಕರು ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಾ ಲಯಕ್ಕೆ ಆಕ್ಷೇಪ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶ ನ್ಯಾಯಾಧೀಶ ಜೀತು ಆರ್.ಎಸ್. ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಆದೇಶ ನೀಡಿದ್ದಾರೆ.