ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ತಲ್ಲೂರು

ಉಡುಪಿ, ಎ.13: ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣ ವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.
ಹಂಗಾರಕಟ್ಟೆ -ಐರೋಡಿ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾದ 20 ದಿನಗಳ ಮಕ್ಕಳಿಗೆ ಯಕ್ಷಗಾನ ನೃತ್ಯ, ಅಭಿನಯ ತರಬೇತಿ ಶಿಬಿರವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಯಕ್ಷಗಾನ ಕಲಿಕೆ ಕೇವಲ ಕಲಾವಿದನಾಗಲು ಅಲ್ಲ, ಒಬ್ಬ ಉತ್ತಮ ಪ್ರೇಕ್ಷಕನಾಗಲು ಸಾಧ್ಯವಾಗುತ್ತದೆ. ದೈಹಿಕವಾಗಿ ಆರೋಗ್ಯದ ಜೊತೆಗೆ ಮನಸ್ಸಿಗೂ ಶಾಂತಿ, ನೆಮ್ಮದಿ ಲಭಿಸುತ್ತದೆ. ಹೀಗಾಗಿ ಮಕ್ಕಳಿಗೆ ಯಕ್ಷಗಾನ ಶಿಕ್ಷಣವನ್ನು ನೀಡಲು ಪೋಷಕರು ಹಿಂದೇಟು ಹಾಕಬಾರದು. ಯಕ್ಷಗಾನವನ್ನು ಅಭ್ಯಾಸ ಮಾಡಿದ ಮಕ್ಕಳು ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡಿರುವುದನ್ನು ನಾವು ಗಮನಿಸಿದ್ದೇವೆ ಎಂದರು.
ಯಕ್ಷಗಾನದಲ್ಲಿ ಅಭಿನಯ, ಮಾತುಗಾರಿಕೆ, ಕುಣಿತ, ಹಿಮ್ಮೇಳದಲ್ಲಿ ಭಾಗವತಿಕೆ, ಚೆಂಡೆ, ಮದ್ದಳೆಯ ಸಂಗೀತ, ವೇಷಭೂಷಣದ ಸೊಗಸಿದೆ. ಮಕ್ಕಳ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೆಳವಣಿಗೆಗೆ ಬೇಕಾದ ಎಲ್ಲಾ ಅಂಶಗಳು ಈ ಕಲೆಯಲ್ಲಿವೆ. ಜೀವನದಲ್ಲಿ ಶಿಸ್ತು ಬದ್ಧ ಜೀವನ ನಡೆಸಲು ಸಹಕಾರಿ ಯಾಗುತ್ತದೆ. ಶುದ್ಧ ಕನ್ನಡ ಮಾತನಾಡುವ ಏಕೈಕ ಕಲೆ ಅಂದರೆ ಅದು ಯಕ್ಷಗಾನ ಮಾತ್ರ ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಗಾನ ಕೇಂದ್ರದ ಅಧ್ಯಕ್ಷರು ಹಾಗೂ ಉದ್ಯಮಿ ಆನಂದ ಸಿ.ಕುಂದರ್ ಮಾತನಾಡಿ, ಇಂದು ಯಕ್ಷಗಾನ ಕಲಾವಿದರಿಗೆ ಉತ್ತಮ ಸಂಭಾವನೆ ದೊರಕುತ್ತಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಕಲಿತರೆ ಜೀವನೋಪಾಯಕ್ಕೂ ದಾರಿಯಾಗುತ್ತದೆ. ಆದ್ದರಿಂದ ಯಕ್ಷಗಾನದ ಬಗ್ಗೆ ಕೀಳರಿಮೆ ಬೇಡ. ಈ ರಂಗದಲ್ಲಿ ಉನ್ನತಿಗೇರುವ ವಿಫುಲ ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.
ಯಕ್ಷಗಾನ ಗುರು, ಶಿಬಿರದ ನಿರ್ದೇಶಕ ಕೆ.ಸದಾನಂದ ಐತಾಳ್ ಮಾತನಾಡಿ, ಯಕ್ಷಗಾನದಲ್ಲಿ ಮಕ್ಕಳ ಭಾವನೆಗಳನ್ನು ನಕರತಾತ್ಮಕವಾಗಿ ಕೆರಳಿಸುವ ಅಂಶಗಳೇ ಇಲ್ಲ. ಇಲ್ಲಿ ಮಕ್ಕಳ ಭಾವನೆಗಳನ್ನು ಅರಳಿಸುವ, ಅವರ ವಿಕಸನಕ್ಕೆ ಕಾರಣವಾಗುವ ಅಂಶಗಳೇ ಹೆಚ್ಚಿವೆ. ಹೀಗಾಗಿ ಪ್ರತೀ ಕುಟುಂಬದಲ್ಲಿ ಒಬ್ಬರಾದರೂ ಯಕ್ಷಗಾನವನ್ನು ಕಲಿಯಲೇ ಬೇಕು ಎಂದರು.
ಯಕ್ಷಗಾನ ಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟೇಶ್ವರದ ಗೀತಾ ಎಚ್ಎಸ್ಎನ್ ಫೌಂಡೇಶನ್ನ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬೈಲು ಉಪಸ್ಥಿತರಿದ್ದರು. ಈ ಯಕ್ಷಗಾನ ತರಬೇತಿ ಶಿಬಿರ ಎ.13ರಿಂದ ಮೇ 3ರವರೆಗೆ ನಡೆಯಲಿದೆ.