ಜೀವಸಂಕುಲಗಳ ಅವನತಿಗೆ ಮುಖ್ಯ ಕಾರಣ ಪ್ಲಾಸ್ಟಿಕ್: ಡಿಸಿ ವಿದ್ಯಾ ಕುಮಾರಿ

Update: 2023-10-01 15:12 GMT

ಉಡುಪಿ, ಅ.1: ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಬಳಸಿದ ಪ್ಲಾಸ್ಟಿಕ್‌ನ್ನು ಅಲ್ಲಲ್ಲಿ ಎಸೆ ಯುವ ಬದಲು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಅದು ಪರಿಸರದಲ್ಲಿ ಸೇರಿ ಮಾನವ ಸಹಿತ ಇಡೀ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹೇಳಿದ್ದಾರೆ.

ಬಡ ನಿಡಿಯೂರು ಹಾಗೂ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸರೆ ಬೀಚ್‌ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನ ಸ್ಮರಣಾರ್ಥವಾಗಿ ಮತ್ತು ಸ್ವಚ್ಛತಾ ಹೀ ಸೇವಾ ಆಂದೋಲನ ಅಂಗವಾಗಿ ರವಿವಾರ ಆಯೋಜಿಸ ಲಾದ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಅವರು ಮಾತನಾಡುತಿದ್ದರು.

ನಮ್ಮ ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಸೇರಿದಂತೆ ಎಲ್ಲಾ ರೀತಿಯ ಸ್ವಚ್ಛತೆ ಬಹಳ ಅವಶ್ಯಕ. ನಮ್ಮ ದೈನಂದಿನ ಜೀವನದಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಆಗ ಮಾತ್ರ ನಾವು ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಸ್ವಚ್ಛತೆ ಸ್ವಸ್ಥ ಸಮಾಜದ ಮೂಲಾಧಾರವಾಗಿದೆ ಎಂದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿ, ಇಂದು ಬೀಚ್ ಸ್ವಚ್ಛತೆಯಲ್ಲಿ ಅಪರ ಪ್ರಮಾಣದ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಣೆ ಮಾಡಿದ್ದೇವೆ. ಇದಕ್ಕೆಲ್ಲ ಕಾರಣ ತ್ಯಾಜ್ಯವನ್ನು ಎಲ್ಲಂದರಲ್ಲಿ ಎಸೆದಿರುವುದು. ತ್ಯಾಜ್ಯವನ್ನು ಸೂಕ್ತ ಜಾಗದಲ್ಲಿ ಹಾಕಿದರೆ ಈ ಸಮಸ್ಯೆ ಉದ್ಭವಿಸಲ್ಲ. ಆದುದರಿಂದ ಮನೆಯ ಕಸವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಸ್ವಚ್ಛತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಕೆಮ್ಮಣ್ಣು ಗ್ರಾಪಂ ಅಧ್ಯಕ್ಷೆ ಕುಸುಮ ರವೀಂದ್ರ, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷೆ ಯಶೋಧ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುನ್ನ ಬೀಚ್ ಸ್ವಚ್ಛತಾ ಶ್ರಮದಾನದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿ ಗಳು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News