ಉಡುಪಿ: ಡಾ.ಜಗಜೀವನರಾಂ, ಡಾ.ಅಂಬೇಡ್ಕರ್ ಜಯಂತಿ ಆಚರಣೆಗೆ ಸಿದ್ಧತೆ

Update: 2025-03-28 23:35 IST
ಉಡುಪಿ: ಡಾ.ಜಗಜೀವನರಾಂ, ಡಾ.ಅಂಬೇಡ್ಕರ್ ಜಯಂತಿ ಆಚರಣೆಗೆ ಸಿದ್ಧತೆ
  • whatsapp icon

ಉಡುಪಿ: ಜಿಲ್ಲೆಯಲ್ಲಿ ಎಪ್ರಿಲ್ 5ರಂದು ಆಚರಿಸಲ್ಪಡುವ ಡಾ.ಬಾಬು ಜಗಜೀವನರಾಂ ಅವರ 118ನೇ ಜಯಂತಿ ಹಾಗೂ ಎಪ್ರಿಲ್ 14ರಂದು ಆಚರಿಸಲ್ಪಡುವ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಎ.5ರಂದು ಬೆಳಗ್ಗೆ 10 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ ಆಚರಿಸಲಾಗುವುದು. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್‌ರ 134ನೇ ಜನ್ಮ ದಿನಾಚರಣೆಯನ್ನು ಎ.14 ರಂದು ಬೆಳಗ್ಗೆ 10:00ಗಂಟೆಗೆ ಮಮಇಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಚರಿಸಲಾಗುವುದು. ಸಭಾ ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬುದ್ಧವಂದನೆ ಕಾರ್ಯಕ್ರಮ ನಡೆಯಲಿದೆ ಎಂದರು.

ಸನ್ಮಾನ: ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಪ್ರತಿಭಾನ್ವಿತ ನಿಲಯಾರ್ಥಿಗಳನ್ನು, ನಗರಸಭೆಯ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು. ಅಲ್ಲದೇ ಅಂತರ್‌ಜಾತೀಯ ವಿವಾಹವಾದ ಮೂವರು ದಂಪತಿಗಳಿಗೆ ಪ್ರೋತ್ಸಾಹಧನ ವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಡಿಸಿ ಹೇಳಿದರು.

ಬಾಬು ಜಗಜೀವನರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭ ವಿಶೇಷ ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ನಿಯೋಜಿಸಬೇಕು. ಜಿಲ್ಲೆಯ ಎಲ್ಲ ತಾಲೂಕು ಕಚೇರಿ, ಶಾಲಾ-ಕಾಲೇಜು, ಗ್ರಾಮ ಪಂಚಾಯತಿ ಹಾಗೂ ಇತರೆ ಕಚೇರಿಗಳಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದೂ ಅವರು ತಿಳಿಸಿದರು.

ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಶಾಲಾ, ಕಾಲೇಜು ಹಂತದಲ್ಲಿ ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿ ಗಳಿಗೆ ಸೂಚಿಸಿದ ಅವರು, ಕಳೆದ ಎರಡು ವಷರ್ಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ಮಹನೀಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಕಾರ್ಯಕ್ರಮವನ್ನು ಸಂಭ್ರಮದಿಂದ ಶಿಸ್ತುಬದ್ದವಾಗಿ ನಡೆಸಬೇಕೆಂದು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ., ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News