ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಿ: ಎಂ.ಟಿ.ರೇಜು

Update: 2023-09-07 15:32 GMT

ಉಡುಪಿ, ಸೆ.7: ವಿದ್ಯಾರ್ಥಿ ನಿಲಯಗಳಲ್ಲಿ ಪ್ರಸಕ್ತ ಸಾಲಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸರಕಾರದ ಸೂಚನೆ ಯಂತೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡಬೇಕು. ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳನ್ನು ಸ್ವಂತ ಕಟ್ಟಡವಾಗಿ ಪರಿವರ್ತಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯ ಜಾಗಗಳನ್ನು ಬಳಸಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬಹುದು ಎಂದು ರಾಜ್ಯ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಜಿ.ರೇಜು ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದರೆ.

ಗುರುವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇಂದು ಹಿರಿಯಡ್ಕದ ಅಂಗನವಾಡಿಯೊಂದಕ್ಕೆ ಭೇಟಿ ನೀಡಿದಾಗ ಅಲ್ಲಿ ಮಕ್ಕಳಿಗೆ ನೀಡುವ ಆಹಾರದ ಕಿಟ್ ಬಗ್ಗೆ ಮೇಲ್ವಿಚಾರಕರಿಗೆ ಸರಿಯಾದ ಮಾಹಿತಿ ಇಲ್ಲದಿರುವುದು ಕಂಡುಬಂದಿದೆ. ಕಿಟ್‌ಗಳು ವಿತರಣೆ ಆಗುತ್ತಿರುವ ಬಗ್ಗೆ ಹಾಗೂ ಕಾಲಕಾಲಕ್ಕೆ ಆಹಾರ ವಿತರಣೆ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ರಿಜಿಸ್ಟರ್‌ನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದು ಸಹ ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಿ ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು ಎಂದರು.

ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಗೂ ಉಪ ನಿರ್ದೇಶಕರು ಆಗಾಗ ಅಂಗನವಾಡಿಗಳಿಗೆ ಭೇಟಿ ನೀಡಬೇಕು. ಸರಕಾರದ ಯೋಜನೆಗಳು ಹಾಗೂ ಸುತ್ತೋಲೆಗಳ ಬಗ್ಗೆ ತಮ್ಮ ಕೆಳಗಿನ ಅಧಿಕಾರಿಗೆ ಮಾಹಿತಿ ನೀಡಬೇಕು ಎಂದ ಅವರು, ಅಂಗನವಾಡಿಯ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿ, ಮಕ್ಕಳಿಗೆ ಆಟ ಆಡಲು ಆಟಿಕೆಗಳನ್ನು ಒದಗಿಸಬೇಕು ಎಂದರು.

ಸರಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ. ಇದನ್ನು ಸಮರ್ಪಕವಾಗಿ ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕೆಂದು ಅವರು ಜಿಲ್ಲೆಯ ಎಲ್ಲಾ ಇಲಾಖೆ ಗಳ ಅಧಿಕಾರಿಗಳ ಸ್ಪಷ್ಟ ನಿರ್ದೇಶನ ನೀಡಿದರು. ಸರಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಅರ್ಹ ಫಲಾನುಭವಿಗಳಿಗೆ ತಲಪುವ ಹಾಗೆ ಕಾರ್ಯಪ್ರವೃತ್ತರಾಗಬೇಕೆಂದರು.

ಗೃಹಲಕ್ಷ್ಮಿಯೋಜನೆ ಶೇ.82.34 ನೊಂದಣಿ: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2,56,850 ಮಂದಿಯ ಗುರಿ ಇದ್ದು, ಈವರೆಗೆ 2,11,478ರಷ್ಟು ನೋಂದಣಿಯಾಗಿ ಶೇ.82.34ರಷ್ಟು ಸಾಧನೆಯಾಗಿದೆ. ನೋಂದಣಿ ಪ್ರಕ್ರಿಯೆ ಈಗಲೂ ಮುಂದುವರಿಯುತ್ತಿದೆ. ರೇಷನ್ ಕಾರ್ಡ್ ಸಮಸ್ಯೆಗಳು ಅಥವಾ ಆನ್‌ಲೈನ್ ಪೋರ್ಟಲ್‌ನ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ನೀಡುತ್ತಿದೆ. ಸಾರ್ವಜನಿಕರು ಇದರ ಲಾಭ ಪಡೆದು ಕೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಸಂಖ್ಯೆ ಹೆಚ್ಚಿರುವುದು ಕಂಡು ಬಂದಿದೆ. ಗರ್ಭಿಣಿಯರಿಗೆ ಸಕಾಲದಲ್ಲಿ ತಾಯಿ ಕಾರ್ಡನ್ನು ವಿತರಿಸಿ ಕಾಲಕಾಲಕ್ಕೆ ಅವರಿಗೆ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಬೇಕು ಎಂದರು.

ಗರ್ಭಿಣಿಯರ ಆರೋಗ್ಯ ಸುಧಾರಣೆಯ ಕುರಿತು ಕಾರ್ಯಗಾರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ಆರೋಗ್ಯ ಇಲಾಖಾ ಸಿಬ್ಬಂದಿಗಳು ಸೇರಿದಂತೆ ಸಂಬಂಧಿತರಿಗೆ ಆಯೋಜಿಸಬೇಕು ಎಂದರ.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಶಕ್ತಿ ಯೋಜನೆ: ಇನ್ನೂ 50 ಬಸ್ಸುಗಳಿಗೆ ಬೇಡಿಕೆ

ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಹೆಣ್ಣು ಮಕ್ಕಳು ಬಸ್ಸಿನಲ್ಲಿ ಉಚಿತವಾಗಿ ಸಂಚರಿಸುವ ಯೋಜನೆಗೆ ಹೆಚ್ಚಿನ ಬೇಡಿಕೆ ಕಂಡು ಬರುತ್ತಿದೆ. ಹೀಗಾಗಿ ಜಿಲ್ಲೆಗೆ ಹೆಚ್ಚುವರಿಯಾಗಿ ಇನ್ನೂ 50 ಬಸ್ಸುಗಳು ಬೇಕೆಂಬ ಬೇಡಿಕೆ ಕೇಳಿ ಬಂದಿದೆ ಎಂದು ಹಿಂದೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ಟಿ.ರೇಜು ತಿಳಿಸಿದರು.

ಇದರೊಂದಿಗೆ ಜಿಲ್ಲೆಯಲ್ಲಿ ಖಾಸಗಿ ಬಸ್ಸಿನಲ್ಲಿಯೂ ಶಕ್ತಿ ಯೋಜನೆ ಜಾರಿಗೆ ತರಬೇಕು ಎಂಬ ಬೇಡಿಕೆ ಇದ್ದು ಸರಕಾರದ ಗಮನಕ್ಕೆ ತರಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News