ಧರ್ಮವನ್ನು ದಯೆಯ ಮೂಲಕ ಅರಿಯಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Update: 2023-09-06 14:28 GMT

ಉಡುಪಿ, ಸೆ.6: ದಯೆಯೇ ಧರ್ಮದ ಮೂಲ. ಧರ್ಮವನ್ನು ದಯೆಯ ಮೂಲಕ ಹುಡುಕಬೇಕು.ಕನಕದಾಸರ ಕೀರ್ತನೆ ಯಲ್ಲಿರುವ ಸಾರದಂತೆ ಸಮಾಜದಲ್ಲಿ ನಾಗರಿಕರು ಕುಲ-ಕುಲವೆಂದು ಹೊಡೆದಾಡದೇ, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಿ ಬಾಳಬೇಕು. ಈ ಮೂಲಕ ಧರ್ಮವನ್ನು ರಕ್ಷಿಸುವ ಕೆಲಸವಾಗಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಬುಧವಾರ ನಗರದ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಮಗಿಂತ ಮುಂದಿರುವವರೊಂದಿಗೆ ಸ್ಫರ್ಧೆ ಮಾಡುವ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭಾವನೆಯನ್ನು ಪೋಷಕರು ಮಕ್ಕಳಲ್ಲಿ ಬೆಳೆಸಬೇಕು. ಇದರಿಂದ ಸ್ಪಸ್ಥ ಸಮಾಜದ ನಿರ್ಮಾಣ ಸಾಧ್ಯ. ನಾವು ಬೆಳೆದು ಬಂದಂತಹ ಭೂತ, ವರ್ತಮಾನ ಹಾಗೂ ಭವಿಷ್ಯತ್ ಕಾಲದ ವಸ್ತು ಸ್ಥಿತಿಗಳ ಕುರಿತು ಮಕ್ಕಳಿಗೆ ತಿಳಿ ಹೇಳಬೇಕು. ಶಾಲೆಯು ಮಕ್ಕಳಿಗೆ ಶಿಕ್ಷಣ ನೀಡಿದರೆ, ಸಂಸ್ಕಾರವನ್ನು ಪೋಷಕರು ಕಲಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ದೇಶದೆಲ್ಲೆಡೆ ಕೃಷ್ಣ ಜಯಂತಿಯನ್ನು ಸಡಗರಿಂದ ಆಚರಿಸಲಾಗು ತ್ತಿದ್ದು, ವಿವಿಧ ಸಂಘ-ಸಂಸ್ಥೆಗಳು, ಮಠ-ಮಂದಿರಗಳು, ಭಜನಾ ಮಂಡಳಿ ಗಳು ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮುದ್ದು ರಾಧೆ ಸ್ಪರ್ಧೆ ಹಾಗೂ ಜಿಲ್ಲೆಯ ಸಾಂಪ್ರದಾುಕ ಕಲೆಯಾದ ಹುಲಿ ವೇಷಧಾರಿಯ ಹುಲಿ ಕುಣಿತಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಈ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮಕ್ಕಳಿಗೆ ಹುಲಿ ಕುಣಿತ ಸ್ಫರ್ದೆಯನ್ನು ಆಯೋಜಿಸಲು ಕ್ರಮವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅವರೂ ಮಾತನಾಡಿದರು. ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ವಿಶೇಷ ಉಪನ್ಯಾಸ ನೀಡಿದರು. ಪಾಡಿಗಾರ್ ಲಕ್ಷ್ಮೀನಾರಾಯಣ ಉಪಾಧ್ಯ ಮತು ಬಳಗದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮುದ್ದುಕೃಷ್ಣ ವೇಷದ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು. ದರ್ಪಣ ಮಹಿಳಾ ಹುಲಿ ವೇಷ ತಂಡದವರು ಹುಲಿ ಕುಣಿತ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್. ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ನಿರೂಪಿಸಿದರೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News