ಉಡುಪಿ: ಕನಕ ಚಿಂತನೆ ಕುರಿತು ಉಪನ್ಯಾಸ

Update: 2023-11-11 15:16 GMT

ಉಡುಪಿ, ನ.11: ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ (ಮಾಹೆ) ಕನಕದಾಸ ಅಧ್ಯಯನ ಸಂಶೋಧನಾ ಪೀಠ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಕನಕದಾಸರ ಕುರಿ ತಾಗಿ ವಿಸ್ತರಣಾ ಉಪನ್ಯಾಸ ಮಾಲಿಕೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ವನ್ನು ಶುಕ್ರವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಖ್ಯಾತ ಶಿಕ್ಷಣ ತಜ್ಞ ಮತ್ತು ಉಡುಪಿಯ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಸಮನ್ವಯಾಧಿಕಾರಿ ಡಾ.ಎ. ಮಹಾಬಲೇಶ್ವರ ರಾವ್ ಅವರು ‘ಕನಕದಾಸರ ಹರಿಭಕ್ತಿ ಸಾರ- ಮರು ವಿವೇಚನೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕನಕದಾಸರ ಹರಿಭಕ್ತಿ ಸಾರವನ್ನು ಮುದ್ರಣ ರೂಪದಲ್ಲಿ ಹೊರತರುವಲ್ಲಿ ಪಾಶ್ಚಾತ್ಯ ವಿದ್ವಾಂಸರಾದ ಡಾ.ಹರ್ಮನ್ ಮೊಗ್ಲಿಂಗ್ ಕೊಡುಗೆಗಳನ್ನು ಸ್ಮರಿಸಿದರು. ಕೃತಿಯ ಮೂಲ ಕರ್ತೃ ಕುರಿತು ಇರುವ ಜಿಜ್ಞಾಸೆಗಳನ್ನು ವಿವರಿಸುವ ಜೊತೆಗೆ ಹರಿಭಕ್ತಿ ಸಾರದಲ್ಲಿ ವ್ಯಕ್ತವಾದ ಕನಕ ಚಿಂತನೆಗಳ ಸಮಗ್ರ ಮಾಹಿತಿ ನೀಡಿದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಜಗದೀಶ ಶೆಟ್ಟಿ ಪ್ರಾಸ್ತಾವಿಕ ಮಾತುಗಳಲ್ಲಿ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರೆ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಭಕ್ತಿ ಮಾರ್ಗದ ಮೂಲಕ ದೇವರನ್ನೊಲಿಸಿಕೊಂಡ ಕನಕ ಚಿಂತನೆಗಳನ್ನು ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ಲೇಸುವ ಅಗತ್ಯತೆಯನ್ನು ತಿಳಿಸಿದರು.

ಎಂ.ಜಿ.ಎಂ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಟಿ.ಭಟ್ ಉಪಸ್ಥಿತರಿದ್ದರು. ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News