ಗಣೇಶನ ಹಬ್ಬಕ್ಕೆ ಡಿಜೆ ಇಲ್ಲ, ಕಾನೂನು ಉಲ್ಲಂಘಿಸಿದರೆ ಕ್ರಮ: ಪೊಲೀಸ್ ಠಾಣಾಧಿಕಾರಿ ಸೂಚನೆ

Update: 2023-09-13 16:15 GMT

ಭಟ್ಕಳ : ಸೆ.18 ರಂದು ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಬ್ಬವನ್ನು ಶಾಂತಿ ಸಡಗರದೊಂದಿಗೆ ಆಚರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

ಗಣೇಶನ ಮೆರವಣಿಗೆಯಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಯಾವುದೇ ಹಂತದಲ್ಲಿ ಯಾವುದೇ ಸಮಸ್ಯೆ ಉಂಟಾದರೆ ಸಮಸ್ಯೆಯನ್ನು ಪರಿಹರಿಸಬೇಕು, ಸಂಧಾನದ ಮೂಲಕ ಪರಿಹರಿಸಲು ಅಥವಾ ತಕ್ಷಣ ಪೊಲೀಸರಿಗೆ ತಿಳಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದು ಡಿಜೆ ಬಳಸಲು ಅನುಮತಿ ಇಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದರು.

ಭಟ್ಕಳ ಉಪವಿಭಾಗದ ಪೊಲೀಸ್ ಅಧೀಕ್ಷಕ ಕೆ.ಶ್ರೀಕಾಂತ್ ಅವರು ವಿವಿಧ ಸಮಾಜದ ಮುಖಂಡರೊಂದಿಗೆ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ ಹಬ್ಬದ ಪ್ರಯುಕ್ತ ಪೊಲೀಸರಿಂದ ಅನುಮತಿ ಪಡೆದು ಮೈಕ್, ಸ್ಪೀಕರ್ ಬಳಸಬಹುದು ಆದರೆ ಡಿಜೆ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು. ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದ್ದು, ಅದನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ಹೊಸ ನಿರ್ಬಂಧಗಳನ್ನು ಹೇರುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ ಶ್ರೀಕಾಂತ್, ಕಾನೂನು ಪಾಲನೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ವಿವಿಧೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಪ್ರಯತ್ನಿಸುವಂತೆ ಸಂಘಟಕರಿಗೆ ತಿಳಿಸಿದರು. ಸಾರ್ವಜನಿಕರು ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅವರು ಹಲವಾರು ಸಲಹೆಗಳನ್ನು ನೀಡಿದರು.

ಭಟ್ಕಳ ಉಪನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋಪಾಲ್ ಚಂದನ್ ಸ್ವಾಗತಿಸಿದರು. ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀಧರ ನಾಯ್ಕ ವಂದಿಸಿದರು.

ಸಭೆಯಲ್ಲಿ ಹೆಸ್ಕಾಂ ಗ್ರಾಮೀಣ ವಿಭಾಗಾಧಿಕಾರಿ ಶೇಖರ ಪೂಜಾರಿ, ಜಾಲಿಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳವಾರ ಭಟ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದ್ದು, ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News