ಸ್ಮಶಾನಗಳಿಗೆ ಸಂಪರ್ಕ ರಸ್ತೆಗೆ ಅನುದಾನ ಬಿಡುಗಡೆ ಮಾಡಲು ಅವಕಾಶವಿಲ್ಲ

Update: 2023-10-25 05:04 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಗ್ರಾಮಗಳಲ್ಲಿ ಸ್ಮಶಾನಗಳಿಗೆ ಜಮೀನು ಖರೀದಿ ಮಾಡಲು ಖಾಸಗಿ ಜಮೀನು ಖರೀದಿ ಮಾಡಲು ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಸರಕಾರವು ಇದೀಗ ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಯಾವುದೇ ಅನುದಾನ ಬಿಡುಗಡೆ ಮಾಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗೆ ಪತ್ರಗಳನ್ನು ಬರೆದಿರುವುದು ಬಹಿರಂಗವಾಗಿದೆ.

ರಾಜ್ಯದ 1,000ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲದಿರುವ ವಿಚಾರ ಕುರಿತು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಚಾಟಿ ಬೀಸುತ್ತಿರುವ ಬೆನ್ನಲ್ಲೇ ಇದೀಗ ಸ್ಮಶಾನಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಯಾವುದೇ ಅನುದಾನ ಬಿಡುಗಡೆ ಮಾಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಬರೆದಿರುವ ಪತ್ರಗಳು ಮುನ್ನೆಲೆಗೆ ಬಂದಿವೆ.

ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಯಾವುದೇ ಅನುದಾನ ಬಿಡುಗಡೆ ಮಾಡಲು ಅವಕಾಶವಿಲ್ಲ ಎಂದು 2023ರ ಅ. 16ರಂದು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಹಾವೇರಿ ಜಿಲ್ಲಾಧಿಕಾರಿಗೆ ಪತ್ರ (ಸಂಖ್ಯೆ ಕಂಇ 90 ಎಲ್ಜಿಡಿ 2023) ಬರೆದಿದ್ದಾರೆ. ಈ ಪತ್ರದ ಪ್ರತಿಯು ''The-file.in''ಗೆ ಲಭ್ಯವಾಗಿದೆ.

ಪತ್ರದಲ್ಲೇನಿದೆ?

ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ರಿ ಸರ್ವೆ ನಂಬರ್ 192ರ ಸ್ಮಶಾನ ಜಮೀನಿಗೆ ರಿ ಸ ನಂ 134/5ರಲ್ಲಿ 00ಎ-06 ಗುಂಟೆ-04 ಆಣೆ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ಸಲುವಾಗಿ ಖಾಸಗಿ ಜಮೀನು ಖರೀದಿಸುವ ಕುರಿತು ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದ್ದು, ಭೂ ಮಂಜೂರಾತಿ ಶಾಖೆಯಲ್ಲಿ ಸ್ಮಶಾನ ಖರೀದಿ ಮಾಡಲು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಆದರೆ ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಯಾವುದೇ ಅನುದಾನ ಬಿಡುಗಡೆ ಮಾಡಲು ಅವಕಾಶವಿರುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.

ಆದಿಜಾಂಬವ ಸಮುದಾಯದ ರುದ್ರಭೂಮಿಗೆ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡುವಂತೆ ಆಗ್ರಹಿಸಿ ತಾಲೂಕಿನ ಬನ್ನೂರು ಪಟ್ಟಣದ ಸುಭಾಷ್‌ನಗರ ಸೇರಿದಂತೆ 28 ಗ್ರಾಮಗಳ ಮಾದಿಗ ಜನಾಂಗದ ನೂರಾರು ಜನರು ಕಾವೇರಿ ಸೇತುವೆ ಬಳಿ ಮೈಸೂರು-ಮಳವಳ್ಳಿ ರಸ್ತೆ ಸಂಚಾರ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಾರವಾರದಿಂದ 3 ಕಿ.ಮೀ ದೂರದಲ್ಲಿರುವ ಸ್ಮಶಾನಕ್ಕೆ ರಸ್ತೆ ಸಂಪರ್ಕ ಇಲ್ಲದ ಹಿನ್ನೆಲೆಯಲ್ಲಿ ತಾಲೂಕಿನ ಅಂಕೋಲಾ ತಾಲೂಕಿನ ಬೆರಡೆ ಗ್ರಾಮದ ನಿವಾಸಿಗಳು ಬುಧವಾರ ಮೃತ ವ್ಯಕ್ತಿಯ ಶವವನ್ನು ಅಂತಿಮ ಸಂಸ್ಕಾರಕ್ಕಾಗಿ ಜೋಳಿಗೆ (ಜೋಲಿ) ಹಾಕಿ ಕೊಂಡೊಯ್ದಿರುವ ಘಟನೆ ನಡೆದಿತ್ತು. ಇಂತಹ ಪ್ರಕರಣಗಳು ಹಲವು ಜಿಲ್ಲೆಗಳ ಗ್ರಾಮಗಳಲ್ಲೂ ಈಗಲೂ ಇಂತಹದ್ದೇ ಪರಿಸ್ಥಿತಿ ಇದೆ. ಅಲ್ಲದೇ 31 ಜಿಲ್ಲೆಗಳಲ್ಲಿನ 21, 388 ಗ್ರಾಮಗಳ ಪೈಕಿ ಇನ್ನೂ 1000 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ ಎಂಬುದು ಗೊತ್ತಾಗಿದೆ.

ರಾಜ್ಯದಲ್ಲಿ ಜನವಸತಿ ಇರುವ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದ್ದು, ಕೇವಲ ಐದು ಗ್ರಾಮಗಳಲ್ಲಿ ಮಾತ್ರವೇ ಮಂಜೂರು ಮಾಡಿರುವ ಭೂಮಿಯ ಪಹಣಿ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಜಮೀನು ಒಪ್ಪಿಸಬೇಕಾಗಿದೆ ಎಂದು ರಾಜ್ಯ ಸರಕಾರವು ಕರ್ನಾಟಕ ಹೈಕೋರ್ಟ್‌ಗೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಾಹಿತಿ ನೀಡಿತ್ತು.

ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಿ. ನರೇಂದರ್ ಮತ್ತು ಸಿ.ಎಂ. ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿದ್ದು, ವಿಚಾರಣೆ ವೇಳೆಯಲ್ಲಿ ಸರಕಾರವು ಈ ಮಾಹಿತಿ ನೀಡಿತ್ತು.

ಅಲ್ಲದೇ ‘ಕಳೆದ 75 ವರ್ಷಗಳಿಂದ ನಾವು ನಾಟಕ ಮಾಡುತ್ತಿದ್ದೇವೆ. ಜನರಿಗೆ ಮೊದಲು ಮೂಲಸೌಲಭ್ಯ ಕಲ್ಪಿಸಿ. ಅಭಿವೃದ್ಧಿ ಎನ್ನುವುದು ಇಲ್ಲಿ ಯಾರಿಗೂ ಬೇಕಿಲ್ಲವಾಗಿದೆ. ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ನಿರ್ಮಿಸುತ್ತೀರಿ...’ ಎಂದು ರಾಜ್ಯಾದ್ಯಂತ ಪ್ರತಿಯೊಂದು ಜನವಸತಿ ಗ್ರಾಮಕ್ಕೂ ಅಗತ್ಯ ಸ್ಮಶಾನ ಭೂಮಿ ಕಲ್ಪಿಸುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿತ್ತು.

ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿಯಾಗದ ಹಿನ್ನೆಲೆಯಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಯಾಗಿದ್ದ ಬಿ.ವೀರಪ್ಪ ಮತ್ತು ನ್ಯಾ.ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತ್ತು.

‘ಯಾವೆಲ್ಲಾ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ ಎಂಬುದರ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಸಂಗ್ರಹ ಮಾಡಿದ್ದಾರೆಯೇ? ಇಲ್ಲದಿದ್ದರೆ ನಾವು ಅದನ್ನು ಮಾಡುತ್ತೇವೆ. ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಅವರನ್ನು ಎಲ್ಲೆಲ್ಲಿ ಸ್ಮಶಾನಕ್ಕೆ ಜಾಗವಿಲ್ಲ ಎಂಬ ಮಾಹಿತಿಯನ್ನು ಪಡೆಯಲು ಜಾಹೀರಾತು ನೀಡಲು ಸೂಚಿಸುತ್ತೇವೆ. ಮಾಡುವುದಕ್ಕಾಗಲ್ಲ ಎಂದರೆ ಹೇಳಿ ಬಿಡಿ. ಕಾಗದದ ಮೇಲಿನ ನ್ಯಾಯಾಲಯದ ಆದೇಶದ ಅನುಪಾಲನೆ ಬೇಡ, ಪ್ರಾಯೋಗಿಕವಾಗಿ ಪಾಲನೆಯಾಗಬೇಕು. ಇಲ್ಲವಾದಲ್ಲಿ ನ್ಯಾಯಾಲಯದ ಆದೇಶ, ಸರಕಾರ, ನಾವು ಮತ್ತು ನೀವೆಲ್ಲರೂ ನಿಷ್ಟ್ರಯೋಜಕವಾಗುತ್ತೇವೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಸ್ಮಶಾನಕ್ಕೆ ಜಾಗವಿಲ್ಲದ ಗ್ರಾಮಗಳಲ್ಲಿ ಅಗತ್ಯ ಭೂಮಿ ಮಂಜೂರಾತಿಗೆ ಕೋರಿ ಸ್ಥಳೀಯ ನಿವಾಸಿಗಳು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿ ಸರಕಾರ ಸಾರ್ವಜನಿಕ ಪ್ರಕಟನೆ ನೀಡಿತ್ತು. ಅದರಂತೆ ಸ್ಮಶಾನಕ್ಕೆ ಹೆಚ್ಚುವರಿ ಜಾಗ ಮಂಜೂರು ಮಾಡುವಂತೆ ಅನೇಕ ಗ್ರಾಮಗಳ ನಿವಾಸಿಗಳು ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಸ್ಮಶಾನ ಇಲ್ಲದ ಗ್ರಾಮಗಳಿಗೆ ಆರು ತಿಂಗಳಲ್ಲಿ ಅಗತ್ಯ ಜಮೀನು ಒದಗಿಸುವಂತೆ 2019ರಲ್ಲಿ ಆದೇಶವನ್ನು ಸರಕಾರವು ಪಾಲಿಸದೇ ಇದ್ದದ್ದಕ್ಕೆ ಹೈಕೋರ್ಟ್ ‘ಸ್ಮಶಾನಕ್ಕೆ ಜಾಗ ಇಲ್ಲದ ಕಡೆ ಹೆಣಗಳನ್ನು ರಸ್ತೆಯಲ್ಲಿ ಹಾಕಬೇಕಾ’ ಎಂದು ಹಿಂದಿನ ಬಿಜೆಪಿ ರಾಜ್ಯ ಸರಕಾರವನ್ನು ಹೈಕೋರ್ಟ್ ಖಾರವಾಗಿ ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ 974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳಿಲ್ಲ ಎಂಬ ಅಂಕಿ ಅಂಶಗಳು ಬಹಿರಂಗವಾಗಿತ್ತು.

ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ಗೆ ಸರಕಾರವು ಈ ಅಂಕಿ ಅಂಶಗಳನ್ನು ಒದಗಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Contributor - ಜಿ.ಮಹಾಂತೇಶ್

contributor

Similar News