ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ಲಕ್ಷ: ಅಧ್ಯಕ್ಷರ ಅಸಮಾಧಾನ
ಮಂಗಳೂರು, ಜು.11: ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಗಳ ಅನುಷ್ಠಾನದಲ್ಲಿ ಸಂಬಂಧಪಟ್ಟ ಇಲಾಖೆ ಗಳು ಹಾಗೂ ಗ್ರಾಪಂಗಳು ನಿರ್ಲಕ್ಷ ಹಿಸುವ ಪ್ರವೃತ್ತಿ ಕಂಡುಬರುತ್ತಿದ್ದು, ಇದರಿಂದ ಸಾರ್ವಜನಿಕ ಫಲಾನುಭವಿಗಳ ವಿವಿಧ ಯೋಜನೆಗಳು ಹಿಂದೆ ಬೀಳುವಂತಾಗಿದೆ ಎಂದು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತೀ ಗ್ರಾಪಂನಲ್ಲಿ ಕನಿಷ್ಠ 50 ವೈಯಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ ಎಲ್ಲಾ ಗ್ರಾಪಂಗಳಿಗೆ ಸೂಚಿಸಲಾಗಿದೆ. ಅನೇಕ ಜನೋಪಯೋಗಿ ಕೆಲಸಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಅವಕಾಶವಿದ್ದರೂ, ಗ್ರಾಪಂಗಳ ನಿರ್ಲಕ್ಷದಿಂದ ಯೋಜನೆಯಲ್ಲಿ ಜಿಲ್ಲೆ ಹಿಂದೆ ಬೀಳುವಂತಾಗಿದೆ. ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಸತಿ ಯೋಜನೆಯ ಫಲಾನುಭವಿಗಳಿಗೆ ನರೇಗಾ ಯೋಜನೆಯಲ್ಲಿ ಪ್ರತೀ ಮನೆಗೂ 90 ಮಾನವ ದಿನಗಳನ್ನು ನೀಡಲು ಅವರು ತಿಳಿಸಿದರು.
ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ವಿಳಂಬಗತಿಯಲ್ಲಿ ನಡೆಯುತ್ತಿವೆ. ಕಿನ್ನಿಗೋಳಿ ಸಮೀಪದ ಪಂಜ ಅಂಗನವಾಡಿಯ ಕಾಮಗಾರಿ ಎರಡು ವರ್ಷಗಳಿಂದಲೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಾಗ ರಸ್ತೆಯ ಪಕ್ಕದಲ್ಲಿ ಚರಂಡಿ ವ್ಯವಸ್ಥೆಯನ್ನೂ ಯೋಜನೆಯಲ್ಲಿ ಸೇರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಪ್ರತೀ ಗ್ರಾಪಂನಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ನರ್ಸರಿ ಸ್ಥಾಪನೆಗೆ ಜಾಗ ಗುರುತಿಸಲು ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ಸರಕಾರಿ ಶಾಲೆಗಳಲ್ಲಿ ಅಂಗನವಾಡಿ ತೆರೆಯಲು ಸೂಕ್ತ ಸ್ಥಳಾವಕಾಶ ವನ್ನು ಆದ್ಯತೆಯಲ್ಲಿ ನೀಡಬೇಕು. ಅಂಗನವಾಡಿಗಳ ಸುತ್ತಮುತ್ತ ತೋಟಗಾರಿಕಾ ಗಿಡಗಳನ್ನು ಬೆಳೆಸಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ‘ಗಂಗಾ ಕಲ್ಯಾಣ’ ಯೋಜನೆಯಲ್ಲಿ ಹಳೆಯ ಎಲ್ಲಾ ಕಾಮಗಾರಿ ಗಳನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯ ಹಲವು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಥಳಾವ ಕಾಶದ ಕೊರತೆ ಕಂಡುಬಂದಿದೆ. ನಬಾರ್ಡ್ ಯೋಜನೆಯಲ್ಲಿ ಜಿಲ್ಲೆಯಲ್ಲಿ 10 ಪಪೂ ಕಾಲೇಜುಗಳ ಕಟ್ಟಡ ಮಂಜೂರಾಗಿದೆ. ಆದರೆ, ಯೋಜನೆಯ ಉಸ್ತುವಾರಿ ವಹಿಸಿರುವ ಕೆಆರ್ಐಡಿಎಲ್ ಸಂಸ್ಥೆ ಇನ್ನೂ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಈ ವಾರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದಿದ್ದರೆ, ಕೆಆರ್ಐಡಿಎಲ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್ಚರಿಸಿದರು.
ಡೆಂಗ್, ಮಲೇರಿಯಾ ಕುರಿತು ಮನೆ-ಮನೆಗೆ ತೆರಳಿ ಮಾಹಿತಿ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರತೀ ಮನೆಯ ಭೇಟಿಗೆ ಒಂದು ರೂ. ನೀಡಲಾಗುತ್ತಿದೆ. ಇದು ಅತಿ ಕಡಿಮೆ ಮೊತ್ತವಾಗಿದ್ದು, ಇದನ್ನು ಹೆಚ್ಚಿಸಲು ಸರಕಾರಕ್ಕೆ ಶಿಫಾರಸು ಮಾಡಲು ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಆರೋಗ್ಯ ಇಲಾಖೆಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಡೆಂಗ್: ಮುಂಜಾಗರೂಕತೆ ಅಗತ್ಯ
ದ.ಕ. ಜಿಲ್ಲೆಯಲ್ಲಿ 297 ಡೆಂಗ್ ಪ್ರಕರಣಗಳು ದೃಢಪಟ್ಟಿದೆ. ಇದುವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. ಡೆಂಗ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಮುಂಜಾಗರೂಕತೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.