ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ
ಅರ್ಜಿ ಆಹ್ವಾನ
ಮಂಗಳೂರು, ಆ.7: 2016-17ನೆ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡುವ ಸಲುವಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ತರಬೇತಿಯನ್ನು ಪಡೆಯಲು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಎರಡನೇ ಮಹಡಿ, ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ಲಾಲ್ಬಾಗ್, ಮಂಗಳೂರು ಮತ್ತು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಫಲಾಹ್ ಕ್ಯಾಂಪಸ್,ಬಾಲಿಕಾಶ್ರಮ ರಸ್ತೆ, ಕಂಕನಾಡಿ, ಮಂಗಳೂರು-4 ಇವರಿಂದ ಪಡೆಯಬಹುದು. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕಚೇರಿಗೆ ಆಗಸ್ಟ್ 16 ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ರಾಜ್ಯ ಸರಕಾರವು ನಿರ್ದಿಷ್ಟಪಡಿಸಿದ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿರಬೇಕು ಹಾಗೂ 2ನೆ ಪಿ.ಯು.ಸಿ. ಕಲಿಯುತ್ತಿರುವ ಅಭ್ಯರ್ಥಿಯಾಗಿರಬೇಕು. ವಿದ್ಯಾರ್ಹತೆ ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. (ದೃಡೀಕೃತ ಅಂಕಪಟ್ಟಿ ಲಗತ್ತಿಸಬೇಕು)
ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 3.50 ಲಕ್ಷ ಮೀರಿರಬಾರದು. (ದೃಢೀಕೃತ ತಹಶೀಲ್ದಾರರಿಂದ ಪಡೆದ ಜಾತಿ ಆದಾಯ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು) ಹಾಗೂ ಸ್ವಯಂ ದೃಢೀಕೃತ ಇತ್ತೀಚಿನ 2 ಭಾವಚಿತ್ರ ಲಗತ್ತಿಸಬೇಕು.
ಅಭ್ಯರ್ಥಿಗಳನ್ನು ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.