ಬಂಟ್ವಾಳ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತಮಿಳುನಾಡಿನಲ್ಲಿ ಪತ್ತೆ
ಬಂಟ್ವಾಳ, ಆ. 14: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಸುಳ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ವಿದ್ಯಾರ್ಥಿನಿಯನ್ನು ತಮಿಳುನಾಡಿನಲ್ಲಿ ಪತ್ತೆ ಹಚ್ಚಿ ತರುವಲ್ಲಿ ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕೃಷ್ಣ ಎಂಬವರ ಪುತ್ರಿ ಚಂದ್ರಕಲಾ(19) ನಾಪತ್ತೆಯಾಗಿದ್ದ ವಿದ್ಯಾರ್ಥಿನಿ. ಸುಳ್ಯ ವಿದ್ಯಾ ಸಂಸ್ಥೆಯೊಂದರಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿರುವ ಈಕೆ ಪ್ರತಿನ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತಿದ್ದರು. ಆ. 9ರಂದು ಬೆಳಗ್ಗೆ ಕಾಲೇಜಿಗೆ ತೆರಳಿದ್ದ ಈಕೆ ಸಂಜೆ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಿಟ್ಲ ಠಾಣೆಯ ಎಎಸೈ ಕಿಟ್ಟು ಮೂಲ್ಯ ಹಾಗೂ ಸಿಬ್ಬಂದಿ ಪ್ರವೀಣ್ ಕುಮಾರ್ ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಡೆಂಕನಿಕೋಟೆಯ ಸಾರಕ್ಕಪಳ್ಳಿ ಎಂಬಲ್ಲಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚಿ ವಿಟ್ಲ ಪೊಲೀಸ್ ಠಾಣೆಗೆ ಕರೆತಂದು ಹೆತ್ತವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.