ವರ್ಷದೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣ : ಡಾ.ಜಿ.ಪರಮೇಶ್ವರ್
ಮಂಗಳೂರು,ನ.18:ಒಂದು ವವರ್ಷದೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳನ್ನು ಮತ್ತು ರಾಜ್ಯದಲ್ಲಿರುವ ಎಲ್ಲಾ ಪೊಲೀಸರಿಗೂ ವಸತಿಗೃಹ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತರ ಕಚೇರಿ,ಉತ್ತರ ಉಪ ವಿಭಾಗ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಕಟ್ಟಡಗಳ ಸಂಕೀರ್ಣ ಹಾಗೂ 16 ಪೊಲೀಸ್ ಸಿಬ್ಬಂದಿಯವರ ವಸತಿ ಗೃಹ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಒಂದನೇ ಹಂತದಲ್ಲಿ ಎರಡೂವರೆ ಸಾವಿರ ಮನೆಗಳನ್ನು ಹಾಗೂ ಎರಡನೆ ಹಂತದಲ್ಲಿ 4,800 ಮನೆಗಳನ್ನು ಒಟ್ಟು 11ಸಾವಿರ ಮನೆಗಳನ್ನು ಪೊಲೀಸರಿಗೆ ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ.ರಾಜ್ಯದಲ್ಲಿರುವ ಒಂದು ಲಕ್ಷ ಪೊಲೀಸ್ ಸಿಬ್ಬಂದಿಗೂ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ:-ರಾಜ್ಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ಮಾಡಲು ಕ್ರಮ ಕೈ ಗೊಳ್ಳಲಾಗುವುದು.ಜರ್ಮನಿಯಲ್ಲಿ ಒಂದು ಸಮೀಕ್ಷೆ ನಡೆಸಿದಾಗ ಅಲ್ಲಿನ ಪೊಲೀಸರ ಬಗ್ಗೆ ಶೇ 84 ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಅದೇ ರೀತಿಯ ಜನಸ್ನೇಹಿ ಪೊಲೀಸರು ರಾಜ್ಯದಲ್ಲಾಗಬೇಕು ,ಇದಕ್ಕೆ ಪೂರಕವಾಗಿ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ ವರ್ಷಕ್ಕೆ ಒಂದು ಲಕ್ಷ ರೂ ಅನುದಾನ ನೀಡಲಾಗುವುದು ಪೊಲೀಸರಿಗೆ ಇಂದಿನಿಂದ 2100 ಹೆಚ್ಚುವರಿ ಭತ್ತೆಯನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ ನೌಕರರ ಮಕ್ಕಳಿಗೆ ಕೇಂದ್ರಿಯ ಪಠ್ಯಕ್ರಮದ ಶಾಳೆಗಳನ್ನು ರೇಂಜ್ಗೆ ಒಂದರಂತೆ ಆರಂಭಿಸಲಾಗುವುದು.ಒಟ್ಟು 7 ರೇಂಜ್ಗಳಲ್ಲಿ ಈ ರೀತಿಯ ಶಾಲೆಗಳನ್ನು ಆರಂಭಿಸಲಾಗುವುದು .ಜಿಲ್ಲೆಯ ಪೊಲೀಸರಿಗೆ ಗಸ್ತಿಗಾಗಿ 25 ಕಾರಿಗಳನ್ನು ಶೀಘ್ರದಲ್ಲಿ ಒದಗಿಸಲಾಗುವುದು ಎಂದು ಪರಮೇಶ್ವರ ತಿಳಿಸಿದರು.
ಪೊಲೀಸ್ ವ್ಯವಸ್ಥೆ ಉತ್ತಮವಾದಾಗ ರಾಜ್ಯದ ಆಡಳಿತದ ಬಗ್ಗೆ ಜನರಿಗೆ ಹೆಚ್ಚಿನ ವಿಶ್ವಾಸ ಮೂಡುತ್ತದೆ, ಸರಕಾರದ ಸಾಮರ್ಥ್ಯವನ್ನು ಅಳೆಯಲಾಗುತ್ತದೆ. ಜಿಲ್ಲೆಯ ಶಾಂತಿ ಸೌರ್ಹಾದತೆಗೆ ಉತ್ತಮ ಪೊಲೀಸ್ ವ್ಯವಸ್ಥೆ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ರಾಜ್ಯ ಅರಣ್ಯ,ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾ ಥ ರೈ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಹಿಯುದ್ದೀನ್ ಬಾವ ವಹಿಸಿದ್ದರು.ಶಾಸಕ ಹಾಗೂ ಮಾಜಿ ಸಚಿವ ಅಭಯ ಚಂದ್ರ ಜೈನ್,ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ ಸೋಜ ,ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಎಂ.ಎ.ಗಫೂರ್ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಕುಮಾರ್ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಜಿ.ಅರುಣ್ ಚಕ್ರವರ್ತಿ ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮೊದಲಾದವರು ಉಪಸ್ಥಿತರಿದ್ದರು.