ಜು.30: ಮಂಗಳೂರಿನಲ್ಲಿ ಉದ್ಯೋಗ ಮೇಳ
ಮಂಗಳೂರು, ಜು.27: ನಗರದ ರಥಬೀದಿಯಲ್ಲಿರುವ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜು.30ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ ಹೆಬ್ಬಾರ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ. ಜಿಲ್ಲೆಯ ಎಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಾಗೂ ಆಯ್ದ ಕೆಲವು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಿಎ, ಬಿಬಿಎಂ, ಬಿಎಸ್ಸಿ, ಬಿಸಿಎ, ಎಂಕಾಂ, ಎಂ.ಎಸ್.ಡಬ್ಲ್ಯು, ಎಂಸಿಎ, ಮಾಹಿತಿ ತಂತ್ರಜ್ಞಾನದ ಪದವಿ ವ್ಯಾಸಂಗ ಪೂರ್ಣಗೊಳಿಸಿದ ಮತ್ತು ವಿದೇಶದಿಂದ ಮರಳಿ ಉದ್ಯೋಗ ಅರಸುತ್ತಿರುವರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳ ನಡೆಸಲಾಗುವುದು ಎಂದರು.
ಮಂಗಳೂರು ಮತ್ತು ಬೆಂಗಳೂರು ಸಹಿತ ಸುಮಾರು 40ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ. ಕಳೆದ ವರ್ಷ ಕೂಡ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು,1265 ಕಂಪೆನಿಗಳು ನೋಂದಾವಣೆ ಮಾಡಿಕೊಂಡಿದ್ದವು. ಸುಮಾರು 200 ಮಂದಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ರಾಜಶೇಖರ ಹೆಬ್ಬಾರ್ ತಿಳಿಸಿದರು.
ಅಂದು ಪೂರ್ವಾಹ್ನ 10 ಗಂಟೆಗೆ ಶಾಸಕ ಡಿ.ವೇದವ್ಯಾಸ ಕಾಮತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡುವರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಮಹೇಶ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಭಾಗವಹಿಸುವ ಅಭ್ಯರ್ಥಿಗಳು ಸೂಕ್ತ ದಾಖಲೆ ಪತ್ರದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 9663437451ನ್ನು ಸಂಪರ್ಕಿಸಬಹುದು ಎಂದು ರಾಜಶೇಖರ ಹೆಬ್ಬಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉದ್ಯೋಗಾಧಿಕಾರಿ ಮುತ್ತುರಾಜ್, ಪ್ಲೇಸ್ಮೆಂಟ್ ಸಂಚಾಲಕಿ ಪ್ರೊ.ಗೀತಾ ಎಂ.ಎಲ್., ಪ್ರೊ.ಅರುಣ ಕುಮಾರಿ, ಸೆಂಟರ್ ಮ್ಯಾನೇಜರ್ ಸತ್ಯೇಂದ್ರ ಪ್ರಕಾಶ್ ಉಪಸ್ಥಿತರಿದ್ದರು.