ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜು.31: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ತೆರೆದ ಬಾವಿ ಅಥವಾ ಕೊಳವೆ ಬಾವಿಯನ್ನು ಪಡೆಯಲು ಕನಿಷ್ಠ 1 ಎಕರೆ ಜಮೀನಿರುವ ಪರಿಶಿಷ್ಟ ಜಾತಿಗೆ ಸೇರಿದ ಸಣ್ಣ ರೈತರಿಗೆ ಅವಕಾಶವಿದ್ದು ಇಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು 18ರಿಂದ 60 ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 98,000ರೂ.ಹಾಗೂ ನಗರ ಪ್ರದೇಶದವರಿಗೆ 1.20 ಲಕ್ಷ ರೂ.ಗಳಾಗಿವೆ. ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇಲ್ಲಿಂದ ಉಚಿತವಾಗಿ ಪಡೆಯಬಹುದು.
ಅರ್ಹ ಅರ್ಜಿದಾರರು ಅರ್ಜಿಯೊಂದಿಗೆ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಆರ್ಟಿಸಿ, ತಹಶೀಲ್ದಾರರಿಂದ ಪಡೆದ ಸಣ್ಣ ರೈತರ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆ.31ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.