ಗ್ರಾಮೀಣ ಮಟ್ಟದಲ್ಲಿ ಸ್ವಚ್ಛತೆ ಅರಿವು ಮೂಡಿಸಿ:ದಿನಕರ ಬಾಬು
ಉಡುಪಿ, ಜು.31: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ಈಗಾಗಲೇ ರಾಷ್ಟ್ರಮಟ್ಟದಲ್ಲಿ ಉತ್ತಮ ಸ್ಥಾನದಲ್ಲಿದ್ದು, ಗ್ರಾಮೀಣ ಮಟ್ಟದಲ್ಲಿ ಪ್ರತಿಯೊಬ್ಬರೂ ಸ್ವಚ್ಛತೆಯ ಕುರಿತು ಗಮನ ಹರಿಸಿದರೆ ಸ್ವಚ್ಛ ಭಾರತ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸ್ವಚ್ಛ ಸವೇಕ್ಷಣಾ ಗ್ರಾಮೀಣ ಕಾರ್ಯಕ್ರಮದಲ್ಲಿ ತಮಗೆ ವಹಿಸಲಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಸೋಮವಾರ, ಶಿಕ್ಷಣ ಇಲಾಖೆಯ ಸಿಆರ್ಪಿ, ಬಿಆರ್ಪಿ, ಅಂಗನವಾಡಿ ಮೇಲ್ವಿಚಾರಕರು ಮತ್ತು ಆರೋಗ್ಯ ಇಲಾಖೆಯ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ದೇಶದಲ್ಲಿ ಮೊದಲ ಬಾರಿ ನಡೆಯುತ್ತಿರುವ ಈ ಸಮೀಕ್ಷೆಯಲ್ಲಿ ದತ್ತಾಂಶಗಳು ಮಾತ್ರ ಆಧಾರವಾಗಿರದೇ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮತ್ತು ಸ್ಥಳ ಪರಿವೀಕ್ಷಣೆ ನಡೆಯಲಿದ್ದು, ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಭಾಗವಹಿ ಸುವಂತೆ ತಿಳಿಸಿದರು.
ಶಾಲೆ ಮತ್ತು ಅಂಗನವಾಡಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.