ಪ್ರಮುಖ ದೇವಳಗಳಿಗೆ ಸಿಸಿಟಿವಿ, ಭದ್ರತೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ
ಕುಂದಾಪುರ, ಆ.1: ರಾಜ್ಯದಲ್ಲಿರುವ ಹಿಂದೂ ದೇವಾಲಯಗಳಲ್ಲಿ ಕಳ್ಳತನ ಹೆಚ್ಚುತ್ತಿರುವುದರಿಂದ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಪ್ರಮುಖ ದೇವ ಸ್ಥಾನಗಳಿಗೆ ಸಿಸಿಟಿವಿ ಮತ್ತು ಭದ್ರತಾ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬಸ್ರೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಬುಧವಾರ ಭೇಟಿ ನೀಡಿದ ಅವರು ಬಳಿಕ ಪತ್ರಕರ್ತರೊಂದಿಗೆ ಮಾತನಾಡುತಿದ್ದರು.
ರಾಜ್ಯದಲ್ಲಿರುವ 34 ಸಾವಿರ ದೇವಸ್ಥಾನಗಳ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಲ್ಲಿ 500 ಕೋಟಿ ರೂ. ಮೀಸಲಿರಿಸಲಾಗಿದ್ದು, ಅದನ್ನು ಸಿಸಿಟಿವಿ ಹಾಗೂ ಭದ್ರತಾ ಸಿಬಂದಿ ನೇಮಕಕ್ಕೆ ಬಳಸಿಕೊಳ್ಳಬೇಕು. ಈ ಸಂಬಂಧ ರಾಜ್ಯ ಮುಜರಾಯಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.
ದೇವಸ್ಥಾನಗಳಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಶೀಘ್ರವೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಲಾಗುವುದು. ಅಲ್ಲದೆ ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡ ಲಾಗುವುದು ಎಂದರು. ಹಲವು ಸಮಯದ ನಂತರ ಸರಕಾರ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಕೂಡಲೇ ಉಡುಪಿಗೆ ಭೇಟಿ ನೀಡಿ, ಆಡಳಿತಾತ್ಮಕ, ಮರಳು ಸಮಸ್ಯೆ, ಹಕ್ಕುಪತ್ರ, ರಸ್ತೆ ದುರಸ್ತಿ ಕುರಿತು ಚರ್ಚಿಸಲು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಬೇಕು ಎಂದು ಅವರು ತಿಳಿಸಿದರು.
ಮರಳುಗಾರಿಕೆಗೆ ನಿಷೇಧ ಅವಧಿ ಮುಗಿದಿದ್ದರೂ ಜಿಲ್ಲಾಡಳಿತ ಇನ್ನೂ ಕೂಡ ಮರಳು ದಿಬ್ಬವನ್ನು ಗುರುತಿಸುವ ಕೆಲಸ ಮಾಡಿಲ್ಲ. ಮರಳು ಸಿಗದೇ ಜನರಿಗೆ ತೊಂದರೆಯಾಗುತ್ತಿದ್ದು, ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯ ಮಹೇಶ್ ಪೂಜಾರಿ, ಗೋಪಾಲ್ ಕೆ., ತಾಪಂ ಸದಸ್ಯ ರಾಮ್ಕಿಶನ್, ಡಿವೈಎಸ್ಪಿ ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಮಂಜಪ್ಪ, ಕುಂದಾಪುರ ಗ್ರಾಮಾಂತರ ಎಸ್ಸೈ ಶ್ರೀಧರ್ ನಾಯ್ಕಾ ಮೊದಲಾದವರು ಉಪಸ್ಥಿತರಿದ್ದರು.