ಎಸ್ಸಿಡಿಸಿಸಿ ಬ್ಯಾಂಕ್ನಿಂದ ಪ್ರತಿಭಾ ಪುರಸ್ಕಾರ ಸಮಾರಂಭ
ಮಂಗಳೂರು, ಆ.4: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ನಗರದ ಕೊಡಿಯಾಲ್ ಬೈಲ್ನ ಬ್ಯಾಂಕ್ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಶನಿವಾರ ಮೊಳಹಳ್ಳಿ ಶಿವರಾಮ್ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕ್ ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಬ್ಯಾಂಕ್ಗಳು ಸಾಲ ನೀಡುವುದು, ಬಡ್ಡಿ ವಸೂಲಿ ಮಾಡುವುದಕ್ಕೆ ತಮ್ಮನ್ನು ಸೀಮಿತಗೊಳಿಸಬಾರದು. ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಪ್ರತಿಭೆಗಳನ್ನು ಗುರುತಿಸಿ ಪುರಸ್ಕರಿಸುವ ಮಹತ್ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದು ಹೇಳಿದರು.
ಶೈಕ್ಷಣಿಕವಾಗಿ ಗ್ರಾಮೀಣ ಮಕ್ಕಳಿಗೆ ಹೆಚ್ಚು ಆದ್ಯತೆಯನ್ನು ನೀಡಬೇಕು. ದ.ಕ. ಜಿಲ್ಲೆಯನ್ನು ಹೊರತುಪಪಡಿಸಿದರೆ ಇನ್ನುಳಿದ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳನ್ನು 5ನೇ ತರಗತಿಗೇ ಶಾಲೆಯಿಂದ ಬಿಡಿಸಿ ಕೆಲಸಕ್ಕೆ ಹಚ್ಚುವಂತಹ ನಿದರ್ಶನಗಳಿವೆ. ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ ಹೆಚ್ಚುರುತ್ತದೆ. ಅಂತಹವರಿಗೆ ಪ್ರೋತ್ಸಾಹದ ಅಗತ್ಯವಿರುತ್ತದೆ ಎಂದರು.
ಸಹ್ಯಾದ್ರಿ ಕಾಲೇಜಿನ ಚೇರ್ಮನ್ ಡಾ.ಮಂಜುನಾಥ್ ಭಂಡಾರಿ ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಪ್ರಭಾರ) ರವೀಂದ್ರ ಬಿ., ಬ್ಯಾಂಕ್ನ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ್, ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಿ., ಎಸ್.ಬಿ.ಜಯರಾಮ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಎಕ್ಸೈಡ್ ಲೈಫ್ನ
ಜನರಲ್ ಮ್ಯಾನೇಜರ್ ಗಣೇಶ್ ಎಂ. ಮತ್ತಿತರರು ಉಪಸ್ಥಿತರಿದ್ದರು. ತನುಶ್ರೀ ಪಿತ್ರೋಡಿ ಯಕ್ಷಗಾನ ಪ್ರಸ್ತುತಪಡಿಸಿದರು. ಚಂದ್ರಲೇಖ ಪ್ರಾರ್ಥಿಸಿದರು. ಬ್ಯಾಂಕ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ. ವಂದಿಸಿದರು.