ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಸೂಚನೆ
ಉಡುಪಿ, ಆ.5: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ.
ಇದಕ್ಕಾಗಿ 2017ರ ಆಗಸ್ಟ್ನಿಂದ 2018ರ ಜುಲೈ ತಿಂಗಳ ಒಳಗೆ ಘಟನೆ ನಡೆದಿರಬೇಕು. 2000ರ ಆ.1ರ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ಹತ್ತು ಸಾವಿರ ರೂ.ಗಳ ನಗದು ಮತು್ತ ಪ್ರಶಸ್ತಿ ಪತ್ರ ನೀಡಲಾಗುತ್ತದೆ.
2018ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಆ.31ರೊಳಗೆ ಸಲ್ಲಿಸಬೇಕು. ಅರ್ಜಿಗಳು ಕನ್ನಡ ಭಾಷೆಯಲ್ಲೇ ಇರಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574978) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.