ಆ.13ರಿಂದ ಉಡುಪಿ ಜಿಲ್ಲೆಯಲ್ಲಿ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ
ಉಡುಪಿ, ಆ.7: ಆರೋಗ್ಯ ಇಲಾಖೆಯಿಂದ ಮಕ್ಕಳಿಗೆ ಹಾಗೂ ಗರ್ಭಿಣಿ ಮಕ್ಕಳಿಗೆ ನೀಡುವ ಲಸಿಕಾ ಕಾರ್ಯಕ್ರಮದಲ್ಲಿ ಬಿಟ್ಟುಹೋದವರಿಗಾಗಿ ಲಸಿಕೆ ನೀಡುವ ಇಂದ್ರಧನುಷ್ ಕಾರ್ಯಕ್ರಮದ ಮೊದಲ ಸುತ್ತು ಆ.13ರಿಂದ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ.
ಜಿಲ್ಲಾ ಲಸಿಕಾ ಕಾರ್ಯಪಡೆಯ ಸಭೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಸತೀಶ್ಚಂದ್ರ ಮಾತನಾಡಿ, ಮಿಷನ್ ಇಂದ್ರಧನುಷ್ ಕಾರ್ಯಕ್ರಮದಲ್ಲಿ ಲಸಿಕೆ ವಂಚಿತ ಗರ್ಭಿಣಿ ಮಹಿಳೆ ಹಾಗೂ ಎರಡು ವರ್ಷದವರೆಗಿನ ಮಕ್ಕಳಿಗೆ ಲಸಿಕೆ ನೀಡಲಾಗು ವುದು. ಇದಲ್ಲದೆ ಶಾಲೆಯಿಂದ ಹೊರಗುಳಿದ 5-6 ವರ್ಷದ ಮಕ್ಕಳಿಗೂ ಲಸಿಕೆ ನೀಡಲಾಗುವುದು. ಇದಕ್ಕಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
5 ವರ್ಷದ ಮಗು ಹುಟ್ಟಿನಿಂದ 7 ವಿವಿಧ ಹಂತಗಳಲ್ಲಿ ಲಸಿಕೆ ಪಡೆಯ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎರಡು ವರ್ಷದವರೆಗಿನ 3173 ಮಕ್ಕಳನ್ನು ಹಾಗೂ 788 ಗರ್ಭಿಣಿ ಮಹಿಳೆಯರನ್ನು ಇದುವರೆಗೆ ಗುರುತಿಸಲಾಗಿದೆ. ಮೊದಲ ಸುತ್ತಿನಲ್ಲಿ ಆ.13, 14, 17 ಹಾಗೂ 18ರಂದು ಜಿಲ್ಲೆಯಾದ್ಯಂತ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಡಾ. ಸತೀಶ್ಚಂದ್ರ ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಮಾತನಾಡಿ, ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಕುಗ್ರಾಮಗಳಲ್ಲಿ ದುರ್ಬಲ ವರ್ಗದವರು ವಾಸಿಸುವ ಕಾಲನಿಗಳಲ್ಲಿ ಸಂಚಾರಿ ವಾಹನದ ಮೂಲಕ ಲಸಿಕೆ ನೀಡಲಾಗುವುದು. ಇದೊಂದು ಮಹತ್ವದ ಕಾರ್ಯಕ್ರಮ ವಾಗಿದ್ದು, ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.