‘ಸ್ವಚ್ಚ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ’
ಬ್ಲಾಕ್ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಪ್ರಮೋದ್
ಉಡುಪಿ, ಆ.11: ಮುಂಬರುವ ನಗರಸಭಾ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಮರ್ಥ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಐದು ವರ್ಷಗಳಲ್ಲಿ ನಗರಸಭಾ ಆಡಳಿತದಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಹಗರಣಗಳಿಲ್ಲದೆ ಸ್ವಚ್ಚ ಆಡಳಿತ ನೀಡಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯ ಪಟ್ಟಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡ ನಗರಸಭಾ ಚುನಾವಣಾ ಪೂರ್ವಭಾವಿ ತಯಾರಿ ಸಭೆಯಲ್ಲಿ ಅವರು ಮಾತನಾಡುತಿದ್ದರು.
ಕಳೆದ ಐದು ವರ್ಷಗಳಲ್ಲಿ ಪಕ್ಷ ಬೇಧವಿಲ್ಲದೆ ಎಲ್ಲಾ ವಾರ್ಡ್ಗಳನ್ನು ಕೋಟ್ಯಾಂತರ ರೂ. ಅನುದಾನದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ. ಉಡುಪಿ ಇತಿಹಾಸದಲ್ಲಿಯೇ ಇಷ್ಟು ಗರಿಷ್ಠ ಅಭಿವೃದ್ಧಿ ಕೆಲಸಗಳು ಯಾವತ್ತೂ ಆಗಿಲ್ಲ ಎಂದವರು ವಿವರಿಸಿದರು.
ನಗರಸಭೆಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ 8000 ನೀರಿನ ಸಂಪರ್ಕಗಳು ಇದ್ದರೆ, ಈಗ ಕಾಂಗ್ರೆಸ್ ಆಡಳಿತವು 18500 ಸಂಪರ್ಕಗಳ ಏರಿಕೆಯೊಂದಿಗೆ ಜನರಿಗೆ ನೀರಿನ ಸೌಲಭ್ಯವನ್ನು ಒದಗಿಸಿದೆ. ಕಳೆದ ಐದು ವರ್ಷಗಳಲ್ಲಿ ಉಡುಪಿ ನಗರಸಭೆಗೆ 503 ಕೋಟಿ ಅನುದಾನವನ್ನು ರಾಜ್ಯ ಸರಕಾರದಿಂದ ತಂದು ಸಮಗ್ರ ಅಭಿವೃದ್ಧಿಗೊಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಇರುವು ದರಿಂದ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತ ಬಂದಾಗ ಮಾತ್ರ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿಗೊಳಿಸಲು ಸಾಧ್ಯ. ಈ ಹಿನ್ನಲೆಯಲ್ಲಿ ಜನತೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ಇನ್ನೊಮ್ಮೆ ಬೆಂಬಲಸುವುದರಲ್ಲಿ ಸಂಶಯವಿಲ್ಲ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಮಾತನಾಡಿ, ಕಳೆದ ಐದು ವರ್ಷಗಳ ಅಭಿವೃದ್ಧಿ ಕಾರ್ಯವನ್ನು ಮುಂದುವರಿಸಿ ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸಬೇಕಾಗಿದೆ ಎಂದರು. ಈ ನಿಟ್ಟಿನಲ್ಲಿ ಚುನಾವಣಾ ಪೂರ್ವ ತಯಾರಿಯಾಗಿ ಪ್ರಣಾಳಿಕ ಸಮಿತಿ, ವೀಕ್ಷಕರ ಸಮಿತಿ ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಪಕ್ಷದ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೋ, ಅಮೃತ್ ಶೆಣೈ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಶಬ್ಬೀರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಹರೀಶ್ ಕಿಣಿ, ದಿವಾಕರ ಕುಂದರ್, ಲಕ್ಷ್ಮಣ ಶೆಣೈ, ಜ್ಯೋತಿ ಹೆಬ್ಬಾರ್, ಪ್ರಥ್ವಿರಾಜ್ ಶೆಟ್ಟಿ, ಗೋಪಾಲ್, ಅಣ್ಣಯ್ಯ ಶೇರಿಗಾರ್, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ರಾಜ್, ಚಂದ್ರಿಕಾ ಶೆಟ್ಟಿ, ಅನಂತ್ ನಾಯ್ಕಿ, ಸುಧಾಕರ ಶೆಟ್ಟಿ ಮೈರ್ಮಾಡಿ, ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.