ಬಂಟ್ವಾಳ: ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಗಂಜಿ ಕೇಂದ್ರ ತೆರೆಯುವಂತೆ ಸೂಚನೆ
ಬಂಟ್ವಾಳ, ಆ. 14: ನೆರೆ ನಿರಾಶ್ರಿತರಿಗೆ ಹಾಗೂ ಅಪಾಯದಲ್ಲಿರುವ ಕುಟುಂಬಗಳಿಗೆ ಪಾಣೆಮಂಗಳೂರಿನ ಶಾರದಾ ಶಾಲೆಯಲ್ಲಿ ಗಂಜಿಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಬಂಟ್ವಾಳ ತಾಲೂಕು ವ್ಯಾಪ್ತಿಯ ನೆರೆ ಪೀಡತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಣೆಮಂಗಳೂರು, ಬಡ್ಡಕಟ್ಟೆ, ಮಿಲಿಟರಿ ಗ್ರೌಂಡ್, ಆಲಡ್ಕ, ಜಕ್ರಿಬೆಟ್ಟು ಬಸ್ತಿಪಡ್ಪು, ಕಂಚಿಕಾರ ಪೇಟೆ, ನಂದಾವರ, ಸಜೀಪಮುನ್ನೂರು ಮೊದಲಾದೆಡೆ ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದ ಜನರು ಅತಂತ್ರರಾಗಿದ್ದಾರೆ. ಇನ್ನು ನೆರೆ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂಜಾಕೃತಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಭಾಗದ ಜನರು ನೆರೆಯ ಬಗ್ಗೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದ್ದು, ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಹಾಗೂ ಕಂದಾಯಾಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿ, ಅಗ್ನಿ ಶಾಮಕ ದಳದ ಸಿಬ್ಬಂದಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸ್ಥಳೀಯರು ಕೈಜೋಡಿಸಿದರು.