ಹಕ್ಕು ಪತ್ರ ವಿತರಣೆ ಮಾಡದಂತೆ ಜಿಲ್ಲಾಧಿಕಾರಿ ಶಾಸಕರ ಹಕ್ಕುಚ್ಯುತಿ ಮಾಡಿದ್ದಾರೆ: ಕೋಟ ಶ್ರೀನಿವಾಸ
ಬಂಟ್ವಾಳ, ಆ. 14: ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ, ಆದರೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ ಹಕ್ಕು ಪತ್ರ ವಿತರಣೆಯನ್ನು ಜಿಲ್ಲಾಧಿಕಾರಿ ತಡೆ ಹಿಡಿದಿರುವುದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಬಿಸಿರೋಡಿನ ಪಕ್ಷದ ಕಚೇರಿಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದರು.
ಹಕ್ಕು ಪತ್ರ ವಿತರಣೆ ಮಾಡದಂತೆ ತಡೆ ಹಿಡಿಯುವ ಮೂಲಕ ಜಿಲ್ಲಾಧಿಕಾರಿ ಅವರು ಶಾಸಕರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಜಿಲ್ಲಾಧಿಕಾರಿಯವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡುವ ಕಾರ್ಯ ಆಗಬೇಕಿದೆ ಎಂದರು.
ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿಗೆ ಅಧಿಕಾರಕ್ಕೆ:
ಮುಂದಿನ ಆ.29ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಪುರಸಭೆಯ ಎಲ್ಲಾ ಕ್ಷೇತಗಳಲ್ಲಿಯೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಶಾಸಕರ ಪರಿಶ್ರಮ ಹಾಗೂ ಪಕ್ಷದ ಸಂಘಟನೆಯ ಮೂಲಕ ಈ ಬಾರಿ ಚುನಾವಣೆಯಲ್ಲಿ ಅತ್ಯಧಿಕ ಅಭ್ಯರ್ಥಿಗಳು ಗೆಲುವು ಸಾಧಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಚರಂಡಿ ಅವ್ಯವಸ್ಥೆ ಯಿಂದ ಪುರಸಭಾ ನಿವಾಸಿಗಳು ಬೇಸತ್ತು ಹೋಗಿದ್ದಾರೆ. ಹೀಗಾಗಿ ಮುಂದಿನ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಪುರಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕಾ ಉಳಿಪ್ಪಾಡಿಗುತ್ತು ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಆಡಳಿತ ಯಂತ್ರದ ಅಧಿಕಾರಿಗಳ ಅಸಹಕಾರ ಬೇಸರ ತರುತ್ತಿದೆ, ಅಭಿವೃದ್ಧಿ ಹಾಗೂ ಜನಸೇವೆಯ ವಿಚಾರದಲ್ಲಿ ರಾಜಕೀಯ ನಡೆಸುವುವರನ್ನು ದೇವರು ಮೆಚ್ಚಲಾರ, ಅಧಿಕಾರಿಗಳ ನಡವಳಿಕೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಪಕ್ಷದ ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನ ಜಿ.ಕೆ ಭಟ್. ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.