ಕಟಪಾಡಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ
ಉಡುಪಿ, ಆ.14: ಕಟಪಾಡಿಯ ಶ್ರೀವಿಶ್ವನಾಥ ಕ್ಷೇತ್ರದಲ್ಲಿ ಆ.27ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ನಾರಾಯಣ ಗುರುಗಳ ವ್ಯಕ್ತಿತ್ವ, ತತ್ವ, ಆದರ್ಶ ಕುರಿತಂತೆ ಪ್ರೌಡಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸುವಂತೆ ಹಾಗೂ ನಾರಾಯಣಗುರುಗಳ ಕುರಿತಂತೆ ಸಂಪನ್ಮೂಲ ವ್ಯಕ್ತಿ ಗಳಿಂದ ವಿಶೇಷ ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವಿದ್ಯಾ ಕುಮಾರಿ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಸುವರ್ಣ, ಗೌರವ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಬಿ.ಪೂಜಾರಿ, ಬಿಲ್ಲವ ಪರಿಷತ್ನ ಸಂಚಾಲಕ ನವೀನ್ ಅಮಿನ್, ಶಿವಾಜಿ ಸುವರ್ಣ, ಹರೀಶ್ ಕುಂದರ್, ಮಾಧವ, ಪ್ರತಾಪ್ ಕುಮಾರ್, ದೇವದಾಸ್ ಆರ್ ಸುವರ್ಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.