ಬ್ರಹ್ಮಾವರ: ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ
ಉಡುಪಿ, ಆ.17: ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ, ವಿಶ್ವ ಸ್ತನ್ಯಪಾನ ಸಪ್ತಾಹ, ಮಾನಸಿಕ ಆರೋಗ್ಯ ಹಾಗೂ ಆರೋಗ್ಯ ಕರ್ನಾಟಕ ವಿಷಯಗಳ ಕುರಿತು ಸ್ತ್ರೀ ಶಕ್ತಿ ಸಂಘಗಳ ಸದಸ್ಯರುಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇತ್ತೀಚೆಗೆ ಬ್ರಹ್ಮಾವರ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.
ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಳಿನಿ ಪ್ರದೀಪ್ ರಾವ್ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಾಪಂ ಸದಸ್ಯರಾದ ದಿನಕರ ಹೇರೂರು, ಕುಸುಮ ಪೂಜಾರ್ತಿ, ಹಂದಾಡಿ ಗ್ರಾಪಂ ಅಧ್ಯಕ್ಷೆ ಪ್ರತಿಮಾ ಶೆಡ್ತಿ, ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಚಂದ್ರ ನಾಯಕ್, ಚಾಂತಾರು ಗ್ರಾಪಂ ಅಧ್ಯಕ್ಷೆ ಸರಸ್ವತಿ, ಹಾರಾಡಿ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೊೀಭಾ, ಸಚ್ಚಿದಾನಂದ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ವಿಶ್ವ ಜನಸಂಖ್ಯಾ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಮಾನಸಿಕ ವಿಭಾಗದ ಆಪ್ತಸಮಾಲೋಚಕಿ ಕ್ಯಾತರಿನ್ ಆರೋಗ್ಯದ ಬಗ್ಗೆ ಹಾಗೂ ಸಚ್ಚಿದಾನಂದ ಆರೋಗ್ಯ ಕರ್ನಾಟಕ ಬಗ್ಗೆ ಮಾಹಿತಿ ನೀಡಿದರು. ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ತಾಲೂಕು ನೋಡೆಲ್ ಅಧಿಕಾರಿ ರಾಮರಾವ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ವಿಶ್ವ ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು. ದೇವಪ್ಪ ಪಟೇಗಾರ್ ಕಾರ್ಯಕ್ರಮ ನಿರೂಪಿಸಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.