ಲಾರಿ ಢಿಕ್ಕಿ: ಗಾಯಾಳು ಪಾದಚಾರಿ ಮೃತ್ಯು
ಪುತ್ತೂರು, ಆ. 20: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಕಳೆದ ಶುಕ್ರವಾರ ಸಂಜೆ ಕಾಂಕ್ರೇಟ್ ಮಿಕ್ಸರ್ ಲಾರಿಯೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಪೆರ್ನೆ ಸಮೀಪದ ಹೊಸಗದ್ದೆ ನಿವಾಸಿ ಆದಂ ಅವರ ಪುತ್ರ ಬಶೀರ್ (40) ಮೃತಪಟ್ಟವರು. ಬಶೀರ್ ಅವರು ಕಳೆದ ಶುಕ್ರವಾರ ಸಂಜೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾಂಕ್ರೇಟ್ ಮಿಕ್ಸರ್ ಲಾರಿಯೊಂದು ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದ ಬಶೀರ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ತಡ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story