ಉಡುಪಿಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ
ಉಡುಪಿ, ಸೆ.2: ಉಡುಪಿ ಶ್ರೀಕೃಷ್ಣ ಮಠದಲ್ಲಿ ರವಿವಾರ ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು.
ನಿರ್ಜಲ ಉಪವಾಸದಲ್ಲಿದ್ದ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಬೆಳಗ್ಗೆ ಮತ್ತು ರಾತ್ರಿ ಲಕ್ಷ ತುಳಸಿ ಅರ್ಚನೆ ಯೊಂದಿಗೆ ಮಹಾಪೂಜೆ ನೆರವೇರಿಸಿದರು. ಮಧ್ಯಾರಾತ್ರಿ ಸ್ವಾಮೀಜಿ ಕೃಷ್ಣಾರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರು ಅರ್ಘ್ಯ ಪ್ರದಾನ ಮಾಡಿದರು.
ಬೆಳಗ್ಗೆಯಿಂದಲೇ ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆ ಯಲ್ಲಿ ಭಕ್ತರು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದರು. ಮಠದ ರಥಬೀದಿ, ರಾಜಾಂಗಣ ಪಾರ್ಕಿಂಗ್ ಪ್ರದೇಶ ಸೇರಿದಂತೆ ಮಠದ ಇಡೀ ಪರಿಸರದಲ್ಲಿ ವೇಷಧಾರಿಗಳು, ಜನಜಾತ್ರೆಯಿಂದ ಸಂಭ್ರಮದ ವಾತಾ ವರಣ ಕಂಡುಬಂತು.
ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಸುವರ್ಣ ತೊಟ್ಟಿಲಿನಲ್ಲಿ ಬಾಲಕೃಷ್ಣನ ಅಲಂಕಾರವನ್ನು ಮಾಡಿದರು. ಬಳಿಕ ಭೋಜನ ಶಾಲೆಯಲ್ಲಿ ಪರ್ಯಾಯ ಸ್ವಾಮೀಜಿ ಹಾಗೂ ಅದಮಾರು ಮಠದ ಕಿರಿಯ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣನಿಗೆ ಸಮರ್ಪಿಸುವ ಲಡ್ಡಿಗೆ ಮತ್ತು ಚಕ್ಕುಲಿ ತಯಾರಿಗೆ ಚಾಲನೆ ನೀಡಿದರು.
ಅಷ್ಟಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದ ಗರ್ಭಗುಡಿ, ಮಠದ ಸುತ್ತುಪೌಳಿ, ಚಂದ್ರಶಾಲೆ, ತೀರ್ಥ ಮಂಟಪ, ಮಧ್ವಮಂಟಪ, ಸುಬ್ರಹ್ಮಣ್ಯ ಗುಡಿ, ನವಗ್ರಹ ಗುಡಿ ಸಹಿತ ಇಡೀ ಕೃಷ್ಣ ಮಠ್ಕೆ ಹೂವಿನ ಅಲಂಕಾರ ಮಾಡಲಾಗಿತ್ತು.
ಭಜನಾ ಕಾರ್ಯಕ್ರಮ: ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ವತಿಯಿಂದ ಮಧ್ವಮಂಟಪದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಬೆಳಗ್ಗೆ 10ಗಂಟೆಯಿಂದ ಸಂಜೆ ಆರು ಗಂಟೆವರೆಗೆ ಹಮ್ಮಿಕೊಂಡಿದ್ದ ಭಜನಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀವಿದ್ಯಾಧಿೀಶ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅದಮಾರು ಮಠದ ದಿವಾನ ವೆಂಕಟರಮಣ ಮುಚ್ಚಿಂತಾಯ, ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ, ಗೋಪಾಲ್ ಕುಂದರ್, ಭಾಸ್ಕರ ಕಿದಿಯೂರು, ಶಿವರಾಮ ಅಂಬಲ್ಪಾಡಿ, ಸಿ.ಸಿ.ಕರ್ಕೇರ, ಭೋಜರಾಜ್ ಕಿದಿ ಯೂರು, ಸುಧಾಕರ ಮೆಂಡ್ಮೊದಲಾದವರು ಉಪಸ್ಥಿತರಿದ್ದರು.
ನಾಳೆ ನಡೆಯುವ ವಿಟ್ಲಪಿಂಡಿ ಉತ್ಸವದಲ್ಲಿ ರಥಬೀದಿ ಹಾಗೂ ಉಡುಪಿ ನಗರದಲ್ಲಿ ಅಲಾರೆ ಗೋವಿಂದ ಕಾರ್ಯಕ್ರಮ ನಡೆಸಲಿರುವ ಮುಂಬೈಯ ಯುವಪ್ರೇರಣಾ ತಂಡದ ಸುಮಾರು 175 ಮಂದಿ ಸದಸ್ಯರು ರವಿವಾರ ಮಠಕ್ಕೆ ಆಗಮಿಸಿ ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯಿಂದ ಆಶೀ ರ್ವಾದ ಪಡೆದರು.
ಬಿಗಿ ಪೊಲೀಸ್ ಭದ್ರತೆ: ಇಂದು ಮತ್ತು ನಾಳೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮಠದ ಪರಿಸರ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಒಂದು ಕೆಎಸ್ಆರ್ಪಿ, ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ಈಗಾಗಲೇ ಮಠದ ಪರಿಸರದಲ್ಲಿ ನಿಯೋಜಿಸಲಾಗಿದೆ. ಜಿಲ್ಲೆಯ ಮೂರು ಮತ ಎಣಿಕಾ ಕೇಂದ್ರಗಳಿಗೆ ನಿಯೋಜಿಸಲಾದ ಎರಡು ಕೆಎಸ್ಆರ್ಪಿ ಹಾಗೂ ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ಮತ ಎಣಿಕೆ ಕಾರ್ಯ ಮುಗಿದ ಬಳಿಕ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇರಿಸಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ್ ನಿಂಬರ್ಗಿ ತಿಳಿಸಿದ್ದಾರೆ.