ಮೊಬೈಲ್ ಸುಲಿಗೆ ಪ್ರಕರಣ: 24 ಗಂಟೆಯೊಳಗೆ ಆರೋಪಿಗಳ ಬಂಧನ
ಮಂಗಳೂರು, ಸೆ. 2: ನೆಹರೂ ಮೈದಾನದ ಫುಟ್ಬಾಲ್ ಪೆವಿಲಿಯನ್ ಬಳಿ ಶನಿವಾರ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮೊಬೈಲ್, ನಗದು ಕಳವುಗೈದಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ನಗರ ದಕ್ಷಿಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕಾವೂರು ಜ್ಯೋತಿನಗರ ನಿವಾಸಿ ಮಣಿಕಂಠ ಯಾನೆ ಮಣಿ (29), ಸಕಲೇಶಪುರ ತಾಲೂಕಿನ ಬಾಚಂಗಿ ಗ್ರಾಮದ ಶಿವ (21) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸ್ಯಾಮ್ಸಂಗ್ ಮೊಬೈಲ್ನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿ ಮಣಿಕಂಠ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎರಡು ಸುಲಿಗೆ ಪ್ರಕರಣಗಳು ದಾಖಲಾಗಿವೆ. ಆರೋಪಿ ಇತ್ತೀಚೆಗೆ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದು ಅಮಾಯಕರನ್ನು ಸುಲಿಗೆ ಮಾಡುವ ಪ್ರವೃತ್ತಿಯನ್ನು ಮುಂದುವರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್, ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.