ಭಾಸ್ಕರ ರೈ ಕುಕ್ಕುವಳ್ಳಿಗೆ ಯಕ್ಷರಕ್ಷಾ ಪ್ರಶಸ್ತಿ ಪ್ರದಾನ
ಮಂಗಳೂರು, ಸೆ. 5: ಮುಂಬೈ ಅಜೆಕಾರು ಕಲಾಭಿಮಾನಿ ಬಳಗದ 'ಯಕ್ಷರಕ್ಷಾ ಪ್ರಶಸ್ತಿ ಪ್ರದಾನ' ಕಾರ್ಯಕ್ರಮ ಕುರ್ಲಾ ಪೂರ್ವದ ರಾಧಾಬಾಯಿ ಟಿ.ಭಂಡಾರಿ ಸ್ಮಾರಕ ಬಂಟರ ಭವನದಲ್ಲಿ ಇತ್ತೀಚಿಗೆ ಜರಗಿತು.
ಪ್ರಸಿದ್ಧ ಯಕ್ಷಗಾನ ಅರ್ಥಧಾರಿ, ಪ್ರವಚನಕಾರ ಹಾಗೂ ಲೇಖಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ 'ಸಪ್ತದಶಾ ಯಕ್ಷ ರಕ್ಷಾ ಪ್ರಶಸ್ತಿ'ಯನ್ನು ಸ್ವೀಕರಿಸಿದರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಮಾತೃಭೂಮಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಬಾಂಬೆ ಬಂಟ್ಸ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಸಿಎ ಸುರೇದ್ರ ಶೆಟ್ಟಿ, ಮಾಜಿ ಅಧ್ಯಕ್ಷ ಶ್ಯಾಮ ಎನ್. ಶೆಟ್ಟಿ, ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ವಂದಿಸಿದರು. ಕಲಾಸಂಘಟಕ ಕರ್ನೂರು ಮೋಹನ ರೈ ಕಾರ್ಯಕ್ರಮ ನಿರೂಪಿಸಿದರು.