ಸೆ.17: ಬಿ.ಸಿ.ರೋಡಿನಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ
ಬಂಟ್ವಾಳ, ಸೆ. 14: ವಿಶ್ವಕರ್ಮ ಸಮಾಜ ಸೇವಾ ಸಂಘ ಜೋಡುಮಾರ್ಗ ಇದರ ಆಶ್ರಯದಲ್ಲಿ 25ನೆ ವರ್ಷದ ಸಾಮೂಹಿಕ ವಿಶ್ವಕರ್ಮ ಪೂಜಾ ಮಹೋತ್ಸವವು ಸೆ.17ರಂದು ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಸಂದೀಪ ಬಿ.ಆಚಾರ್ಯ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 9ರಿಂದ ಸಂಕಲ್ಪ, ಕಲಶಪ್ರತಿಷ್ಠೆ ಹಾಗೂ ಪೂಜಾ ವಿಧಿ, ಜೊತೆಗೆ ವಿಶ್ವಜ್ಯೋತಿ ಮಹಿಳಾ ಮಂಡಳಿಯ ಸದಸ್ಯೆಯರಿಂದ ಭಜನಾ ಸಂಕೀರ್ತನೆ ನಡೆದು 11ಗಂಟೆಗೆ ಮಹಾಪೂಜೆ ನಡೆಯಲಿದೆ. 11.30 ರಿಂದ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಮೂಡಬಿದಿರೆ ಎಸ್.ಕೆ.ಎಫ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಜಿ.ರಾಮಕೃಷ್ಣ ಆಚಾರ್, ಮಂಗಳೂರು ಶಕ್ತಿ ಪಿಯು ಕಾಲೇಜಿನ ಆಡಳಿತಾಧಿಕಾರಿ ಬೈಕಾಡಿ ಜನಾರ್ಧನ ಆಚಾರ್ಯ, ಸಂಘದ ಗೌರವಾಧ್ಯಕ್ಷ, ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪೂಂಜಾಲಕಟ್ಟೆ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪುಷ್ಪಾ ಡಿ.ಆಚಾರ್ಯ, ಧಾಂರ್ಇಕ ಕಾರ್ಯದರ್ಶಿ ನಾರಾಯಣ ಆಚಾರ್ಯ ಕಳ್ಳಿಗೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ರಂಗಕಲಾವಿದ ಸಂದೀಪ್ ಆಚಾರ್ಯ ಸೊರ್ನಾಡು, ಕು.ಕೌಶಿಕ್ ಬಂಟ್ವಾಳ ಅವರನ್ನು ಸನ್ಮಾನಿಸಲಾಗುವುದು ಎಂದವರು ತಿಳಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ, ಬಳಿಕ ಕಲ್ಲಡ್ಕ ಶಿಲ್ಪಾಗೊಂಬೆ ಬಳಗದ ರಮೇಶ್ ಕಲ್ಲಡ್ಕ ಹಾಗೂ ನಿತಿನ್ ಕಲ್ಲಡ್ಕ ಸಹಯೋಗದಲ್ಲಿ ವಿಶ್ವಜ್ಯೋತಿ ಮಹಿಳಾ ಮಂಡಳಿ ಹಾಗೂ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.