ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತುಳು ಭವನಕ್ಕೆ ಭೇಟಿ
ಮಂಗಳೂರು, ಸೆ. 26: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ತುಳು ಭವನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಹಾಗೂ ಯೋಜನೆಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ತಾನು ಮಾಡಿಸುವುದಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಉರ್ವಾಸ್ಟೋರ್ ಬಳಿ ಇರುವ ತುಳು ಭವನಕ್ಕೆ ಬುಧವಾರ ಭೇಟಿ ನೀಡಿದ ಅವರು ತುಳುಭವನದಲ್ಲಿ ಇದುವರೆಗೆ ನಡೆದಿರುವ ಕಾಮಗಾರಿಯನ್ನು ಪರಿಶೀಲನೆ ನಡೆಸಿ , ಬಾಕಿ ಉಳಿದಿರುವ ಕಾಮಗಾರಿಯ ಬಗ್ಗೆ ಅಕಾಡಮಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ತುಳುಭವನದಲ್ಲಿ ಪೂರ್ಣಗೊಳ್ಳಬೇಕಾಗಿರುವ ದೊಡ್ಡ ಸಭಾಂಗಣ, ಆರ್ಟ್ ಗ್ಯಾಲರಿ, ಮ್ಯೂಸಿಯಮ್, ಲಿಫ್ಟ್ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ನೀಡಿರುವ ಅಂದಾಜು ಪಟ್ಟಿಯಂತೆ ಅವಶ್ಯವಿರುವ 3.6 ಕೋ.ರೂ. ಅನುದಾನವನ್ನು ಬಿಡುಗಡೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವುದಾಗಿ ಸಚಿವ ಯು.ಟಿ.ಖಾದರ್ ಭರವಸೆ ನೀಡಿದರು.
ಪದವಿ ಪೂರ್ವ ಶಿಕ್ಷಣದಲ್ಲಿ ತುಳುಪಠ್ಯವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅಕಾಡಮಿ ಸಲ್ಲಿಸಿರುವ ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದ ಸಚಿವರು, ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ನಡೆಸುವುದಾಗಿ ಖಾದರ್ ಹೇಳಿದರು.
ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಸದಸ್ಯರಾದ ತಾರಾನಾಥ್ ಗಟ್ಟಿ ಕಾಪಿಕಾಡ್, ಬೆನೆಟ್ ಅಮ್ಮನ್ನ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.