ಪಡಿತರ ಅಂಗಡಿಗಳ ಸರ್ವರ್ ಸಮಸ್ಯೆ ನಿವಾರಣೆಗೆ ಕ್ರಮ
ಬಂಟ್ವಾಳ, ಸೆ. 26 : ಗ್ರಾಮಾಂತರ ಭಾಗದ ಪಡಿತರ ಅಂಗಡಿಗಳಲ್ಲಿ ಉಂಟಾಗಿರುವ ಸರ್ವರ್ ಸಮಸ್ಯೆಯಿಂದಾಗಿ ಚೀಟಿದಾರರು ಪಡಿತರ ಅಕ್ಕಿಗಾಗಿ ಅಲೆಯುವಂತಹ ಸಮಸ್ಯೆಗಳನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.
ಬಂಟ್ವಾಳ ತಾಪಂ ಸಾಮರ್ಥ್ಯ ಸೌಧದಲ್ಲಿ ಜನ ಶಿಕ್ಷಣ ಟ್ರಸ್ಟ್, ದಿ ಹಂಗರ್ ಪ್ರೊಜೆಕ್ಟ್ ಸುಗ್ರಾಮ ಸಂಘದ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಸುಗ್ರಾಮ ಸಂವಾದದಲ್ಲಿ ಭಾಗವಹಿಸಿ ಆಹಾರ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು ಅವರು ಸೂಚಿಸಿದರು.
ಮಹಾತ್ಮಾ ಗಾಂಧಿ ನರೇಗಾ ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮಾ, ತಾಪಂ ಅಧಿಕಾರಿ ಅಶೋಕ್, ಮಹಾತ್ಮ ಗಾಂಧಿ ನರೇಗಾ ಮಾಜಿ ಓಂಬುಡ್ಸ್ಮೆನ್ ಶೀನ ಶೆಟ್ಟಿ ಸಂವಾದದಲ್ಲಿ ಪಾಲ್ಗೊಂಡರು.
ಸುಗ್ರಾಮ ಅಧ್ಯಕ್ಷೆ ದಾಕ್ಷಾಯಿಣಿ ಸಹಿತ 13 ಗ್ರಾಪಂಗಳ 31 ಮಂದಿ ಸದಸ್ಯೆಯರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಂಯೋಜಕ ಚೇತನ್ ಕುಮಾರ್ ಸಂವಾದ ಕಾರ್ಯಕ್ರಮ ಸಂಯೋಜಿಸಿದರು. ಕಾವೇರಿ, ಪದ್ಮಿನಿ ಸಹಕರಿಸಿದರು.