ಉಡುಪಿ: ‘ಹೃದಯಕ್ಕಾಗಿ ನಡಿಗೆ’ ಜಾಗೃತಿ ಜಾಥಾ
ಉಡುಪಿ, ಸೆ.30: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಸ್ಪತ್ರೆ, ಜಿಲ್ಲಾ ಎನ್ಪಿಸಿಡಿಸಿಎಸ್ ಆ್ಯಂಡ್ ಎನ್ಟಿಸಿಪಿ ವಿಭಾಗ, ಭಾರತೀಯ ವೈದ್ಯಕೀಯ ಮಂಡಳಿ, ಕರಾವಳಿ ನ್ಯೂಸಿಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾವನ್ನು ಶನಿವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ‘ಹೃದಯಕ್ಕಾಗಿ ನಡಿಗೆ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ನೂರಾರು ಸಂಖ್ಯೆಯ ವಿದ್ಯಾರ್ಥಿಗಳು, ಹಿರಿಯರು, ಗಣ್ಯರು, ಹೃದಯ ಜಾಗೃತಿಯ ಸಂದೇಶ ಸಾರಿ ಕೊಂಡು ಜಾಥಾದಲ್ಲಿ ಸಾಗಿ ಬಂದರು. ಜಾಥವು ಅಜ್ಜರಕಾಡು ಜಿಲ್ಲಾಸ್ಪತ್ರೆ ಯಲ್ಲಿ ಸಮಾಪ್ತಿಗೊಂಡಿತು.
ಈ ಸಂದರ್ಭದಲ್ಲಿ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ಚಂದ್ರಶೇಖರ ಅಡಿಗ, ಭಾರತೀಯ ವೈದ್ಯಕೀಯ ಮಂಡಳಿ ಉಡುಪಿ ಕರಾವಳಿಯ ಅಧ್ಯಕ್ಷ ಡಾ.ವೈ.ಸುದರ್ಶನ್ ರಾವ್ ಮೊದಲಾದವರು ಉಪಸ್ಥಿತರಿದ್ದರು.