ಉಡುಪಿ ನಗರಸಭೆಯಲ್ಲಿ ಹಿರಿಯ ನಾಗರಿಕರಿಗಾಗಿ ಹೆಲ್ಫ್ಡೆಸ್ಕ್, ಪ್ರತ್ಯೇಕ ಕೌಂಟರ್: ರಘುಪತಿ ಭಟ್
ಉಡುಪಿ, ಅ.1: ಉಡುಪಿ ನಗರಸಭೆಯಲ್ಲಿ ವಿವಿಧ ಸೌಲಭ್ಯಗಳನ್ನು ಪಡೆ ಯಲು ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಮತ್ತು ಬಿಲ್ ಪಾವತಿಗಾಗಿ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಖೆ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ದಾಶ್ರಮಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ಆಯೋಜಿಸಲಾದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ನಿರ್ವಹಣೆಯಲ್ಲಿ ಹಿರಿಯ ನಾಗರಿಕ ರಿಗೆ ಡೇ ಕೇರ್ ಸೆಂಟರ್ ಆರಂಭಿಸಲು ನಗರದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಅಗತ್ಯ ವ್ಯವಸ್ಥೆಯನ್ನು ಶೀಘ್ರದಲ್ಲಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವವರನ್ನು ಸಮಾಜ ಗೌರವಿಸದ ವಾತಾವರಣ ಸೃಷ್ಠಿಯಾಗಬೇಕು. ಆ ಮೂಲಕ ಹಿರಿಯ ನಾಗರಿಕರನ್ನು ಅಲಕ್ಷಿಸು ವವರಿಗೆ ಎಚ್ಚರಿಕೆ ನೀಡಬೇಕು. ಹಿರಿಯ ನಾಗರಿಕರಿಗೆ ಪ್ರೀತಿ ಬೇಕೆ ಹೊರತು ಸಾಂತ್ವನ ಅಲ್ಲ. ಮನೆಯಲ್ಲಿರುವ ವೃದ್ಧರ ಸೇವೆ ಮಾಡುವ ಮಕ್ಕಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಪ್ರತಿವರ್ ಹಮ್ಮಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡೋಲು ವಾದನದಲ್ಲಿ ವಿಶೇಷ ಸಾಧನೆಗೈದ ಶತಾಯುಷಿ ಗುರುವ ಕೊರಗ ಅವರನ್ನು ಸನ್ಮಾನಿಸಲಾಯಿತು. ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ. ಕೊಡಂಚ, ಅಪರ ಜಿಲ್ಲಾದಿಕಾರಿ ವಿದ್ಯಾಕುಮಾರಿ, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಅಧ್ಯಕ್ಷ ಸಿ.ಎಸ್.ರಾವ್, ಕಾರ್ಕಳ ಅಧ್ಯಕ್ಷ ರಾಮಕೃಷ್ಣ, ಬೈಂದೂರು ಅಧ್ಯಕ್ಷ ವಸಂತ ಹೆಗ್ಡೆ, ಹಿರಿಯ ನಾಗರಿಕರ ಕಾಯ್ದೆ ಅನುಷ್ಠಾನ ಸಮಿತಿಯ ಲಕ್ಷ್ಮೀಬಾಯಿ, ಪ್ರಕಾಶ್ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಿರಂಜನ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
57,402 ಮಂದಿಗೆ ಗುರುತಿನ ಚೀಟಿ
ಉಡುಪಿ ಜಿಲ್ಲೆಯ 60ವರ್ಷ ದಾಟಿದ 57,402 ಹಿರಿಯ ನಾಗರಿಕರಿಗೆ ಇಲಾಖೆಯಿಂದ ಆಗಸ್ಟ್ವರೆಗೆ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. ಹಿರಿಯ ನಾಗರಿಕರ ಸಹಾಯವಾಣಿಯಲ್ಲಿ ಒಟ್ಟು 6658 ಕರೆಗಳನ್ನು ಸ್ವೀಕರಿಸ ಲಾಗಿದ್ದು, 422 ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 395 ಪ್ರಕರಣ ಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ತಿಳಿಸಿದರು.