ವಕ್ಫ್ ಸೊತ್ತು ಸಂರಕ್ಷಣೆಗೆ ಸರ್ವ ಕ್ರಮ: ಸಚಿವ ಝಮೀರ್ ಖಾನ್
ಮಂಗಳೂರು, ಅ.4: ದಫನ್ ಭೂಮಿ ಸೇರಿದಂತೆ ಎಲ್ಲ ವಕ್ಫ್ ಆಸ್ತಿ ಸಂರಕ್ಷಿಸಲಾಗುವುದು. ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಹಣ ಬಿಡುಗಡೆಗೊಳಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.
ಸುಳ್ಯ ಅನ್ಸಾರಿಯಾ ಅನಾಥಾಲಯದ ಆಶ್ರಯದಲ್ಲಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬುಧವಾರ ನಡೆದ ವಕ್ಫ್ ಸಂಸ್ಥೆಗಳ ಮುತವಲ್ಲಿ ಸಮಾವೇಶ, ಮಾಹಿತಿ ಕಾರ್ಯಾಗಾರ ಹಾಗೂ ಸಚಿವರಿಗೆ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಆದ್ಯತೆಯ ಮೇರೆಗೆ ನಗರ ಪ್ರದೇಶವನ್ನು ಆಯ್ಕೆ ಮಾಡಲಾಗುವುದು. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಎಲ್ಲ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ದು ಪಾರದರ್ಶಕವಾಗಿ ವಿತರಿಸುವುದು ಇಲಾಖೆಯ ಗುರಿ ಎಂದು ಅವರು ತಿಳಿಸಿದರು.
ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಕಣಚೂರ್ ಮೋನು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯ ಟಿ.ಎಂ. ಶಹೀದ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ಎಸ್. ಸಂಶುದ್ದೀನ್, ಅನ್ಸಾರಿಯಾ ಯತೀಂಖಾನ ಅನಾಥಾಲಯ ಅಧ್ಯಕ್ಷ ಅಬ್ದುಲ್ ಮಜೀದ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ವಕ್ಫ್ ಸದಸ್ಯ ಕೆ.ಎಂ. ಮುಸ್ತಫಾ ಸ್ವಾಗತಿಸಿ, ವ್ಯವಸ್ಥಾಪಕ ಓವೈಸ್ ವಂದಿಸಿದರು.