ಭಟಕಳ ಅರ್ಬನ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಿಗೆ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ
ಭಟ್ಕಳ, ಅ. 6: ರಾಜ್ಯದ ಪ್ರತಿಷ್ಟಿತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್. ಅಬ್ದುಲ್ ರಝಾಕ್ ರಿಗೆ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ ಲಭಿಸಿದೆ.
ಟೈಮ್ಸ್ ಆಫ್ ಇಂಡಿಯಾ ಸಮೂಹವು ಬೆಂಗಳೂರಿನ ಖಾಸಗಿ ಹೊಟೇಲ್ ಶಾಂಗ್ರೀಲಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮತ್ತು ಶಾಸಕ ಅರವಿಂದ ಲಿಂಬಾವಳಿ ಶ್ರೀಯುತರಿಗೆ ಶಾಲು ಹೊದಿಸಿ, ಅಭಿನಂದನಾ ಫಲಕವನ್ನು ನೀಡಿ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಹಲವು ಸಾಧಕರಿಗೆ ಈ ಸಮಾರಂಭದಲ್ಲಿ ಗೌರವಿಸಲಾಯಿತು.
ಸತತ 33 ವರ್ಷಗಳಿಂದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿದ್ದು, ಯಶಸ್ವಿಯಾಗಿ ಪ್ರಧಾನ ಕಾರ್ಯನಿರ್ವಾಹಕ ಹುದ್ದೆಯನ್ನು ನಿಭಾಯಿಸುತ್ತ ಬಂದಿರುವ ಎಸ್.ಎ. ರಝಾಕ್ ಇತರರಿಗೆ ಮಾದರಿಯಾಗಿರುತ್ತಾರೆ. ಇವರ ಮುಂದಾಳತ್ವದಲ್ಲಿ ಬ್ಯಾಂಕು ಹೊಸ ಹೊಸ ಅವಿಷ್ಕಾರಗಳನ್ನು ಅಳವಡಿಸಿಕೊಂಡು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುವಲ್ಲಿ ಮಂಚೂಣಿಯಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು.