ಯುವತಿಯ ಅತ್ಯಾಚಾರ ಪ್ರಕರಣ : ಆರೋಪ ಸಾಬೀತು
ಕುಂದಾಪುರ, ಅ.7: ಎಂಟು ವರ್ಷಗಳ ಹಿಂದೆ ನಡೆದ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಂಜುನಾಥ ನಾಯ್ಕಾ(33) ಎಂಬಾತ ನನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ದೋಷಿ ಎಂಬುದಾಗಿ ತೀರ್ಪು ನೀಡಿದೆ.
2010ರ ಮಾ.10ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರುವ ಮನೆಗೆ ನುಗ್ಗಿದ ಮಂಜುನಾಥ್, 20ರ ಹರೆಯದ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ್ದನು. ಇದರಿಂದ ಆಕೆ 2010ರ ಸೆ.29ರಂದು ಗರ್ಭಿಣಿಯಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವತಿ ಮದುವೆಯಾಗುವಂತೆ ಮಂಜುನಾಥ ಬಳಿ ಕೇಳಿದಾಗ ಆತ 2 ಲಕ್ಷ ರೂ. ವರದಕ್ಷಿಣೆ ಕೇಳಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸ ಲಾಗಿದೆ. ಡಿ.23ರಂದು ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಆಗಿನ ಬೈಂದೂರು ವೃತ್ತ ನಿರೀಕ್ಷಕ ಕಾಂತರಾಜು ಕೆ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಒಟ್ಟು 9 ಸಾಕ್ಷಿಗಳ ಪೈಕಿ 8 ಸಾಕ್ಷಿಗಳ ವಿಚಾರಣೆ ನಡೆಸಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಆರೋಪಿಯನ್ನು ದೋಷಿಯೆಂದು ಘೋಷಿಸಿದರು. ಪ್ರಕರಣದ ಮುಂದಿನ ವಿಚಾರಣೆ ಅ.9ರಂದು ನಿಗದಿಪಡಿಸಲಾಗಿದೆ. ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿ ಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.