ಸಿದ್ದಗಂಗಾ ಸ್ವಾಮೀಜಿಗೆ ಮತ್ತೆ ಐಸಿಯುನಲ್ಲಿ ಚಿಕಿತ್ಸೆ
ಬೆಂಗಳೂರು, ಡಿ.16: ಅನಾರೋಗ್ಯದ ಹಿನ್ನೆಲೆಯಲ್ಲಿ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ಮತ್ತೆ ಐಸಿಯುನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.
ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೂ ಪೋಷಕಾಂಶದ ಕೊರತೆ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಅವರಿಗೆ ಪೋಷಕಾಂಶಗಳನ್ನು ಪೂರೈಸಲಾಗುತ್ತಿದೆ ಎಂದು ಅವರ ಆಪ್ತ ವೈದ್ಯರಾದ ಡಾ.ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಶಿವಕುಮಾರ ಸ್ವಾಮೀಜಿಗಳಿಗೆ ಶಸ್ತ್ರ ಚಿಕಿತ್ಸೆಯಾಗಿತ್ತು. ಗಾಯ ವಾಸಿಯಾಗುತ್ತಿದ್ದು, ಅವರಿಗೆ ಬೇಯಿಸಿದ ಆಹಾರ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ತೀವ್ರ ನಿಗಾ ಘಟಕದಲ್ಲೇ ಎಲ್ಲರನ್ನೂ ಲವಲವಿಕೆಯಿಂದ ಮಾತನಾಡಿಸುತ್ತಿದ್ದಾರೆ. ಅಗತ್ಯ ಪೋಷಕಾಂಶಗಳನ್ನು ನೀಡಿ ಅವರ ಆರೋಗ್ಯ ಸಂಪೂರ್ಣ ಸುಧಾರಿಸಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆಯ ಹಿರಿಯ ವೈದ್ಯರು ಮಾಧ್ಯಮಗಳಿಗೆ ಹೇಳಿದ್ದಾರೆ.