ಸಿದ್ದರಾಮಯ್ಯನವರೆ ನಮ್ಮ ಮುಖ್ಯಮಂತ್ರಿ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ
ಬೆಂಗಳೂರು, ಜ. 27: ‘ನಮಗೆ ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ನಮ್ಮ ಕಷ್ಟಗಳೇನೇ ಇದ್ದರೂ, ನಾವು ಅವರ ಬಳಿಯೇ ಹೇಳಿಕೊಳ್ಳುತ್ತೇವೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಇಂದಿಲ್ಲಿ ಹೇಳಿದ್ದಾರೆ.
ರವಿವಾರ ಬನಶಂಕರಿ ಆರನೆ ಹಂತದ ಜಟ್ಟಿಗರಹಳ್ಳಿಯಲ್ಲಿ ‘ಕನಕ ಸಮುದಾಯ ಭವನ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾನು ಮೂರು ಬಾರಿ ಶಾಸಕರಾಗಲು ಸಿದ್ದರಾಮಯ್ಯ ಅವರೇ ಕಾರಣ. ಯಾರು ಏನೇ ಹೇಳಿದರೂ ನಮಗೆ ಸಿದ್ದರಾಮಯ್ಯನವರೇ ಸಿಎಂ ಹೇಳಿದರು.
ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮಗೆಲ್ಲ ನಾಯಕರಾಗಿದ್ದು, ಅವರು ಎಲ್ಲ ಜಾತಿ, ಸಮುದಾಯಗಳಿಗೆ ರಾಜಕೀಯ ಅವಕಾಶ ಕಲ್ಪಿಸಿದ್ದಾರೆ. ಆದರೆ, ಕೆಲವರು ಮಗ-ಸೊಸೆಗೆ ಮಾತ್ರ ರಾಜಕೀಯ ಅವಕಾಶ ಕೊಡುತ್ತಾರೆಂದು ಟೀಕಿಸಿದರು.
ಸಿದ್ದರಾಮಯ್ಯನವರು ಇನ್ನೂ ಐದು ವರ್ಷ ಅಧಿಕಾರದಲ್ಲಿ ಇದ್ದಿದ್ದರೆ ರಾಜ್ಯ ಸಾಕಷ್ಟು ಅಭಿವೃದ್ದಿಯಾಗುತ್ತಿತ್ತು. ಮೈತ್ರಿ ಸರಕಾರ ಬಂದು 7 ತಿಂಗಳು ಕಳೆದರೂ ಇದುವರೆಗೂ ಬೆಂಗಳೂರು ರಸ್ತೆ ಅಭಿವೃದ್ಧಿಯಾಗಿಲ್ಲ ಎಂದ ಅವರು, ಸಿದ್ದರಾಮಯ್ಯನವರು ತಮ್ಮನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.
ಮೈತ್ರಿ ಸರಕಾರದಲ್ಲಿ ಒಂದು ಮಾತು ಹೇಳಿದರೂ ಹೆಚ್ಚು ಕಡಿಮೆಯಾಗುತ್ತದೆ. ಸಿದ್ದರಾಮಯ್ಯನವರು ಸಾಲಮಾಡಿ ಚುನಾವಣೆ ಎದುರಿಸಿದರು. ಆದರೆ, ಅವರ ವಿರುದ್ಧ ಒಳಸಂಚು ಮಾಡಿ ಅಭ್ಯರ್ಥಿ ಹಾಕಿದರು ಎಂದು ಸೋಮಶೇಖರ್ ಇದೇ ವೇಳೆ ಟೀಕಿಸಿದರು.
ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿ ಮಾತನಾಡಿ, ಹಿಂದುಳಿದ ವರ್ಗದ ಹಾಗೂ ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯದ ದನಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಯಾವಾಗಲೂ ಪರೋಪಕಾರಿ. ಅವರು ಮತ್ತೆ ಸಿಎಂ ಆಗಬೇಕು ಎಂದು ನುಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಟಿ.ಬಿ.ನಾಗರಾಜ್, ಸಿ.ಎಸ್.ಶಿವಳ್ಳಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಕುರುಬ ಸಮುದಾಯದ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು.