ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಪ್ರಶ್ನಿಸಿದ ಮೇಲ್ಮನವಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
ವಕೀಲ ಅಮಿತ್ ಶೂಟೌಟ್ ಪ್ರಕರಣ
ಬೆಂಗಳೂರು, ಫೆ.5: ನಗರದ ವಕೀಲ ಅಮಿತ್ ಕೇಶವಮೂರ್ತಿ ಶೂಟೌಟ್ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸಿ.ಎಚ್.ಹನುಮಂತರಾಯ ಅವರನ್ನು ನೇಮಕ ಮಾಡಿದ ಸರಕಾರದ ಕ್ರಮ ಪ್ರಶ್ನಿಸಿದ ಮೇಲ್ಮನವಿ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಈ ಕುರಿತಂತೆ ಆರೋಪಿ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಆರೋಪಿ ರಾಜೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಪಬ್ಲಿಕ್ ಪ್ರಾಸಿಕ್ಯೂಟರ್ ಈ ಪ್ರಕರಣದಲ್ಲಿ ಪೂರ್ವಗ್ರಹ ಭಾವನೆ ಇದೆ. ಅಂತೆಯೇ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ವಿಚಾರದಲ್ಲಿ ಸರಕಾರ ಕೇಶವ ರೆಡ್ಡಿ ಪ್ರಕರಣದಲ್ಲಿ ನಿರ್ದೇಶಿಸಿರುವ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದು ಆಕ್ಷೇಪಿಸಿದರು.
ಇದಕ್ಕೆ ಹತ್ಯೆಯಾಗಿರುವ ಅಮಿತ್ ತಂದೆ ಪರ ವಕೀಲ ಡಿ.ಆರ್.ರವಿಶಂಕರ್, ಹನುಮಂತರಾಯರ ವೃತ್ತಿ ಬದ್ಧತೆಯನ್ನು ಪ್ರಶ್ನಿಸುವಂತಿಲ್ಲ ಎಂದು ತಿರುಗೇಟು ನೀಡಿದರು. ಸರಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ಇದೊಂದು ಸಾರ್ವಜನಿಕ ವಲಯದಲ್ಲಿ ಸಂಚಲನ ಸಷ್ಟಿಸಿದ ಪ್ರಕರಣ. ಈ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರಕಾರ ಕಾನೂನು ಬದ್ಧವಾಗಿಯೇ ನಡೆದುಕೊಂಡಿದೆ ಎಂದರು. ಸಿ.ಎಚ್.ಹನುಮಂತರಾಯ ಅವರನ್ನು 2017ರ ಮಾರ್ಚ್ 2ರಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ರಾಜೇಶ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ಈಗಾಗಲೇ ತಿರಸ್ಕರಿಸಿದೆ.
ಪ್ರಕರಣವೇನು: 2017ರ ಜ.13ರಂದು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಚಾರ್ಯ ಎಂಜಿನಿಯರಿಂಗ್ ಕಾಲೇಜು ಬಳಿ ಅಮಿತ್ ಮಧ್ಯಾಹ್ನ 3.15ರ ಸಮಯದಲ್ಲಿ ತಮ್ಮ ಸ್ವಿಫ್ಟ್ ಕಾರಿನಲ್ಲಿ ಕುಳಿತಿದ್ದರು. ಸಂಚಾರ ದಟ್ಟಣೆಯಿಂದ ಕೂಡಿದ ಈ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಒಳಗೆ ಕುಳಿತು ರಾಜೇಶ್ ಪತ್ನಿ ಪಿಡಿಒ ಶ್ರುತಿಗೌಡ ಅವರೊಂದಿಗೆ ಚರ್ಚಿಸುತ್ತಿದ್ದರು. ಅಮಿತ್ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದ ರಾಜೇಶ್, ದಿಢೀರನೆ ಬಂದು ರಾಜೇಶ್ ಇವರ ಕಾರಿನ ಬಾಗಿಲು ತೆರೆದು ಅಮಿತ್ ಮೇಲೆ ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು ಎಂಬುದು ದೋಷಾರೋಪ ಪಟ್ಟಿಯಲ್ಲಿರುವ ಅಂಶ.
ಶ್ರುತಿ ಗೌಡ ಅವರ ನಡೆ ಮತ್ತು ಚಟುವಟಿಕೆಗಳ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದ ರಾಜೇಶ್, ಅವರು ಬಳಸುವ ಕಾರಿಗೆ ಜಿಪಿಎಸ್ ಅಳವಡಿಸಿ ಅದರ ಮುಖಾಂತರ ಅವರಿದ್ದ ಸ್ಥಳಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಎಂಬುದು ದೋಷಾರೋಪ ಪಟ್ಟಿಯಲ್ಲಿನ ಮತ್ತೊಂದು ಅಂಶ. ನೆಲಮಂಗಲದ ಖ್ಯಾತ ಕೇಶವಮೂರ್ತಿ ಅವರ ಪುತ್ರನಾಗಿದ್ದ ಅಮಿತ್ ಕೇಶವಮೂರ್ತಿ ಲಂಡನ್ನಲ್ಲಿ ಎಲ್ಎಲ್ಎಂ ಸ್ನಾತಕೋತ್ತರ ಪದವಿ ಪಡೆದಿದ್ದರು. ಬೆಂಗಳೂರಿನಲ್ಲಿ ವಕೀಲಿಕೆ ನಡೆಸುತ್ತಿದ್ದರು.