53 ಸಾವಿರ ಕೋಟಿ ರೂ.ವೆಚ್ಚದಲ್ಲಿ ಜಲಧಾರೆ ಯೋಜನೆ: ರಾಜ್ಯಪಾಲ ವಜುಭಾಯಿ ವಾಲಾ
ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ
ಬೆಂಗಳೂರು, ಫೆ.6: ರಾಜ್ಯದಲ್ಲಿನ ಎಲ್ಲ ಗ್ರಾಮಗಳಿಗೆ ಭೂ ಮೇಲ್ಮೈ ಜಲಮೂಲಗಳಿಂದ 85 ದೈನಂದಿನ ಪ್ರತಿ ಲೀಟರ್ನಷ್ಟು(LPCD) ಶುದ್ಧ ಕುಡಿಯುವ ನೀರು ಪೂರೈಸಲು 53 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದ ‘ಜಲಧಾರೆ’ ಯೋಜನೆಗಾಗಿ ವಿಸ್ತೃತ ಯೋಜನಾ ವರದಿ ತಯಾರಿಕೆ ಕಾರ್ಯ ಕೈಗೊಳ್ಳಲಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.
ಬುಧವಾರ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದಲ್ಲಿ ಉಭಯ ಸದನಗಳ ಸದಸ್ಯರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, 1.80 ಕೋಟಿ ಜನಸಂಖ್ಯೆಗೆ ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 16 ಸಾವಿರ ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳನ್ನು ಸ್ಥಾಪಿಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯನ್ನು ಉತ್ತಮಗೊಳಿಸಲು ‘ರಾಜ್ಯ ನಿರ್ಮಲೀಕರಣ ನೀತಿ’ಯನ್ನು ಶೀಘ್ರದಲ್ಲಿಯೇ ರೂಪಿಸಲಾಗುವುದು. ಹಾಲು ಉತ್ಪಾದಕರ ಖಾತೆಗಳಿಗೆ ಪ್ರೋತ್ಸಾಹ ಧನವನ್ನು ನೇರವಾಗಿ ವರ್ಗಾಯಿಸುವುದಕ್ಕಾಗಿ ‘ಕ್ಷೀರ ಸಿರಿ’ ಆಧಾರ್-ಆಧಾರಿತ ಅಪ್ಲಿಕೇಷನ್ ಅಭಿವೃದ್ಧಿಗೊಳಿಸಲಾಗಿದೆ ಎಂದು ಅವರು ಹೇಳಿದರು.
ಬಡವರ ಬಂಧು: ಬೀದಿ ಬದಿಯ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ಪಡೆಯಲು ಕಷ್ಟ ಪಡುತ್ತಿದ್ದು, ಅವರಿಗೆ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕು(ಡಿಸಿಸಿ)ಗಳು ಮತ್ತು ನಗರ ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಲು ‘ಬಡವರ ಬಂಧು’ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಸಕ್ತ ವರ್ಷದ ಜ.31ರವರೆಗೆ 2.5 ಲಕ್ಷ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಬೆಂಗಳೂರು ನಗರ ಹಾಗೂ ಇತರ ನಗರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರಿಗಾಗಿ ವಸತಿಯನ್ನು ಕಲ್ಪಿಸುವುದಕ್ಕೆ ಮನೆಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
2816 ಕಿ.ಮೀ.ಪ್ರಧಾನ ಜಿಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. 7800 ಕಿ.ಮೀ.ರಾಜ್ಯ ಹೆದ್ದಾರಿಗಳು ಮತ್ತು ಪ್ರಧಾನ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-4ನ್ನು ಕೈಗೆತ್ತಿಕೊಳ್ಳುವುದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯಪಾಲ ತಿಳಿಸಿದರು.
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ-24(RIDF) ಯೋಜನೆ ಅಡಿಯಲ್ಲಿ 206 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 178 ರಸ್ತೆ ಮತ್ತು 35 ಸೇತುವೆ ನಿರ್ಮಾಣ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬೆಳಗಾವಿ ಹಾಗೂ ತುಮಕೂರು ನಗರಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಆನ್ಲೈನ್ ಸೇವೆಗಳನ್ನು ಏಕೀಕೃತಗೊಳಿಸಲು ಕಮ್ಯಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.
ಆರೋಗ್ಯ ಉಪ ಕೇಂದ್ರಗಳು ಮೇಲ್ದರ್ಜೆಗೆ: ಮುಂದಿನ 7 ವರ್ಷಗಳ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಪ್ರಾಥಮಿಕ ಆರೋಗ್ಯ ಪಾಲನಾ ಸೇವೆಗಳನ್ನು ಒದಗಿಸುವುದಕ್ಕಾಗಿ ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಸುಸ್ಥಿತಿ ಕೇಂದ್ರಗಳಾಗಿ(HWC) ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ. ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕಾಗಿ ಗದಗ, ಕೊಪ್ಪಳ, ಚಾಮರಾಜನಗರ ಮತ್ತು ಹಾಸನದಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.
ಹುಬ್ಬಳ್ಳಿಯಲ್ಲಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಹಾಗೂ ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್)ಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ ಮೈಸೂರು ಮತ್ತು ಕಲ್ಬುರ್ಗಿಯಲ್ಲಿ ಟ್ರೌಮಾ ಕೇರ್ ಸೆಂಟರ್ಗಳ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದೆ ಮತ್ತು ಸೌಲಭ್ಯಗಳನ್ನು ಒದಗಿಸುವ ಕಾರ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.