ಇ.ಡಿ. ಮುಂದೆ ಹಾಜರಾದ ಚಿದಂಬರಂ
ಹೊಸದಿಲ್ಲಿ, ಫೆ. 8: ಐಎನ್ಎಕ್ಸ್ ಮೀಡಿಯಾ ಹಣ ವಂಚನೆಗೆ ಸಂಬಂಧಿಸಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಹಣ ವಂಚನೆ ತಡೆ ಕಾಯ್ದೆ ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ರವಾನಿಸಲಾದ ಸಮನ್ಸ್ ಹಿನ್ನೆಲೆಯಲ್ಲಿ ಚಿದಂಬರಂ ಕೇಂದ್ರ ದಿಲ್ಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಹಲವು ಬಾರಿ ವಿಚಾರಣೆ ನಡೆಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಕಳೆದ ವರ್ಷ ಜಾರಿ ನಿರ್ದೇಶನಾಲಯ ಭಾರತ ಹಾಗೂ ವಿದೇಶದಲ್ಲಿದ್ದ ಕಾರ್ತಿ ಅವರ ಅಂದಾಜು 54 ಕೋ. ರೂ. ಸೊತ್ತನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
Next Story